ರೈತರ ಹತ್ಯೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ ಮೇಲೆ ಪರಿಣಾಮ ಬೀರುತ್ತಾ?, ಬಿಜೆಪಿಯಿಂದ ಸಭೆ
ನವದೆಹಲಿ, ಅಕ್ಟೋಬರ್ 11: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ವಿಚಾರದಲ್ಲಿ ನವದೆಹಲಿಯಲ್ಲಿ ಬಿಜೆಪಿಯು ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದೆ. ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಮುಖ್ಯವಾಗಿ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿಯು ತಿಳಿದು ಬಂದಿದೆ. ಹಾಗೆಯೇ ಈ ಘಟನೆಯು ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಮೇಲೆ ಪರಿಣಾಮ ಬೀರುತ್ತಾ ಎಂದು ಕೂಡಾ ಬಿಜೆಪಿಯು ಈ ಸಭೆಯಲ್ಲಿ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರೈತರ ಮೇಲೆ ಕಾರು ಒಂದು ಹರಿದು ಹೋಗಿದ್ದು ಈ ಸಂದರ್ಭದಲ್ಲಿ ಆ ಕಾರಿನಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾರ ಪುತ್ರ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೇ ಎಫ್ಐಆರ್ ದಾಖಲು ಮಾಡಲಾಗಿದ್ದು, ಆ ಬಳಿಕ ತಲೆ ಮರೆಸಿಕೊಂಡಿದ್ದ ಆಶಿಶ್ ಮಿಶ್ರಾರ ಬಂಧನ ಕೂಡಾ ಮಾಡಲಾಗಿದೆ.
ಪೊಲೀಸರ ಮುಂದೆ ಹಾಜರಾಗುವಂತೆ ಆಶಿಶ್ ಮಿಶ್ರಾಗೆ ಉತ್ತರ ಪ್ರದೇಶದ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಸಹಕಾರ ನೀಡಿದ, ಸರಿಯಾಗಿ ಸ್ಪಂದಿಸದ ಆರೋಪದಡಿಯಲ್ಲಿ ಆಶಿಶ್ ಮಿಶ್ರಾ ಬಂಧಿಸಲಾಗಿದೆ ಎಂದು ಡಿಜಿಪಿ ಉಪೇಂದ್ರ ಅಗರ್ವಾಲ್ ಹೇಳಿದ್ದರು. ಆ ಬಳಿಕ ನ್ಯಾಯಾಲಯವು ಆಶಿಶ್ ಮಿಶ್ರಾಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ಆದರೆ ಈಗ ಪೊಲೀಸರು ಮೂರು ದಿನಗಳ ಕಾಲ ಆಶಿಶ್ ಮಿಶ್ರಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮಧ್ಯೆ ನಡುವೆ ವಿರೋಧ ಪಕ್ಷಗಳು ಅಜಯ್ ಮಿಶ್ರಾರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಯು ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಅಧಿಕವಾಗಿದೆ. ಈ ನಡುವೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅಜಯ್ ಮಿಶ್ರಾ, "ನನ್ನ ಮಗ ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ," ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಪೊಲೀಸರಿಗೆ ಬಳಿ ಆಶಿಶ್ ಮಿಶ್ರಾ ತಾನು ಎಲ್ಲಿದ್ದೆ ಎಂದು ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.
ಆದರೆ ಈ ನಡುವೆ ಪಕ್ಷವು ಈ ವಿಚಾರವನ್ನು ಮುಂದಿನ ವರ್ಷ ಚುನಾವಣೆ ಇರುವ ಹಿನ್ನೆಲೆಯಲ್ಲಿ ಭಾರೀ ಗಂಭೀರವಾಗಿ ತಿಳಿದಿದ್ದಾರೆ. ಈ ನಿಟ್ಟಿನಲ್ಲಿ ಸಭೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ. ಇನ್ನು ಅಜಯ್ ಮಿಶ್ರಾ ರಾಜೀನಾಮೆ ಅಥವಾ ಅಮಾನತು ವಿಚಾರದಲ್ಲಿಯೂ ಚರ್ಚೆ ನಡೆದಿದೆ ಎಂದು ವರದಿಯು ಹೇಳಿದೆ. ಈ ಸಭೆಯಲ್ಲಿ ಬಿಜೆಪಿ ಕಾರ್ಯದರ್ಶಿ ಬಿ ಎಲ್ ಸಂತೋಷ್, ಬಿಜೆಪಿ ಉತ್ತರ ಪ್ರದೇಶ ಉಸ್ತುವಾರಿ ರಾಧಾ ಮೋಹನ್ ಸಿಂಗ್, ಬಿಜೆಪಿ ಚುನಾವಣಾ ಉಸ್ತುವಾರಿ ಧಮೇಂದ್ರ ಪ್ರಧಾನ್, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್, ಉತ್ತರ ಪ್ರದೇಶ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸುನಿಲ್ ಬನ್ಸಾಲ್, ಪಕ್ಷದ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications