ತಮಿಳರ ಸಾಂಸ್ಕೃತಿಕ ಆಶಯ ಪೂರೈಸಲು ಕಟಿಬದ್ಧ: ಮೋದಿ
ನವದೆಹಲಿ, ಜನವರಿ 21: ತಮಿಳುನಾಡಿನ ಶ್ರೀಮಂತ ಸಂಸ್ಕೃತಿ ಬಗ್ಗೆ ಹೆಮ್ಮೆ ಇದೆ. ತಮಿಳುನಾಡಿನ ಜನರ ಎಲ್ಲ ಸಾಂಸ್ಕೃತಿಕ ಆಶಯಗಳನ್ನು ಪೂರೈಸಲು ಪ್ರಯತ್ನ ಮಾಡುತ್ತೇವೆ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರಕಾರ ಕಟಿ ಬದ್ಧವಾಗಿದೆ. ನಾವು ಸದಾ ರಾಜ್ಯಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಹೇಳಿದ್ದು, ಅವರ ಟ್ವಿಟ್ಟರ್ ಖಾತೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ಜಲ್ಲಿಕಟ್ಟು ಕ್ರೀಡೆ ಬಗ್ಗೆ ಪ್ರಸ್ತಾಪಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಈ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ನರೇಂದ್ರ ಮೋದಿ, ತಮಿಳುನಾಡು ಸರಕಾರದ ಯಾವುದೇ ಪ್ರಯತ್ನವನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದರು.
ಜಲ್ಲಿಕಟ್ಟು ವಿಚಾರವಾಗಿ ತಮಿಳುನಾಡು ಸರಕಾರ ಸುಗ್ರೀವಾಜ್ಞೆಯೊಂದನ್ನು ಸಿದ್ಧಪಡಿಸಿ, ಕೇಂದ್ರಕ್ಕೆ ಕಳುಹಿಸಿತ್ತು. ಅದಕ್ಕೆ ಕೇಂದ್ರ ಒಪ್ಪಿಗೆ ಸೂಚಿಸಿದೆ. ಇದೀಗ ರಾಷ್ಟ್ರಪತಿ ಅಂಕಿತಕ್ಕಾಗಿ ಕಳುಹಿಸಿದೆ.