ಶಿಕ್ಷೆ ಅನುಭವಿಸಿದ ರಾಜಕಾರಣಿಗಳಿಗೆ ಅಜೀವ ನಿಷೇಧ: ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ, ಸೆಪ್ಟೆಂಬರ್ 16: ಜನಪ್ರತಿನಿಧಿಗಳ ವಿರುದ್ಧದ ಬಾಕಿ ಇರುವ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಲು ಸಮಯ ನಿಗದಿ ಮಾಡಿಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ. ಇದು ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರಿಗೆ ಅನ್ವಯವಾಗಲಿದೆ ಎಂದು ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.
ಹಾಗೆಯೇ ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರು ಎದುರಿಸುತ್ತಿರುವ ಅಪರಾಧ ಪ್ರಕರಣಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವ ಯಾವುದೇ ನಿರ್ಧಾರವನ್ನು ಸ್ವಾಗತಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ವಿದ್ಯುನ್ಮಾನ ಮಾಧ್ಯಮಗಳ ಮೇಲೆ ನಿಯಂತ್ರಣ?: ಸುಪ್ರೀಂಕೋರ್ಟ್ ಚಿಂತನೆ
ಶಿಕ್ಷೆಗೆ ಒಳಗಾದ ರಾಜಕಾರಣಿಯು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವಪರ್ಯಂತ ನಿಷೇಧ ಹೇರಬಹುದೇ ಎಂದು ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ಕೇಳಿತ್ತು. ದೇಶದ ವಿವಿಧ ಭಾಗಗಳಲ್ಲಿನ ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರ ವಿರುದ್ಧದ 4,442 ಬಾಕಿ ಅಪರಾಧ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವ ವಿಚಾರವಾಗಿ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಹೀನ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾದ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಆಜೀವ ನಿಷೇಧ ವಿಧಿಸಬೇಕು ಎಂಬ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರವನ್ನು ಕೇಳಿದೆ.
ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾದ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಜೀವನ ಪರ್ಯಂತ ಮತ್ತೆ ಸರ್ಕಾರಿ ನೌಕರಿ ಗಳಿಸುವುದರಿಂದ ಅನರ್ಹನಾಗುತ್ತಾನೆ. ಆದರೆ ಇದೇ ನಿಯಮ ಏಕೆ ಜನಪ್ರತಿನಿಧಿ ಕಾಯ್ದೆಯಡಿ ಇರುವ ರಾಜಕಾರಣಿಗಳಿಗೆ ಅನ್ವಯವಾಗುವುದಿಲ್ಲ? ಅವರಿಗೆ ಮಾತ್ರ ಜೈಲು ಶಿಕ್ಷೆ ಅವಧಿ ಮುಗಿಸಿದ ಆರು ವರ್ಷದ ಬಳಿಕ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ? ಎಂದು ಅರ್ಜಿದಾರ ಅಶ್ವಿನಿ ಉಪಾಧ್ಯಾಯ ಪರ ವಕೀಲ ವಿಕಾಸ್ ಸಿಂಗ್ ವಾದಿಸಿದ್ದಾರೆ.
ಆಂಬುಲೆನ್ಸ್ ಸೇವೆಗೆ ಸೂಕ್ತ ದರ ನಿಗದಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ರಾಜಕಾರಣಿಗಳ ವಿರುದ್ಧ ಬಾಕಿ ಇರುವ ಪ್ರಕರಣಗಳು ಮತ್ತು ಅವುಗಳ ಹಂತಗಳ ಮಾಹಿತಿಗಳನ್ನು ಒದಗಿಸುವಂತೆ ಎಲ್ಲ ಹೈಕೋರ್ಟ್ಗಳಿಗೂ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಹಾಗೆಯೇ ಈ ವಿಚಾರವಾಗಿ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.