ಸುಪ್ರೀಂಕೋರ್ಟ್ ಆದೇಶದಿಂದ ನಿಟ್ಟುಸಿರು ಬಿಟ್ಟ ವಲಸೆ ಕಾರ್ಮಿಕರು
ದೆಹಲಿ, ಜೂನ್ 9: ಕೊರೊನಾ ವೈರಸ್ ಲಾಕ್ಡೌನ್ ಉಲ್ಲಂಘನೆ ಕಾರಣಗಳಿಗಾಗಿ ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳಿ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಠಾಣೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ವಿವಿಧ ಸೆಕ್ಷನ್ಗಳ ಅಡಿ ಕೇಸ್ ದಾಖಲಿಸಲಾಗಿದೆ. ಈ ಎಲ್ಲ ಪ್ರಕರಣಗಳನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಕೋರ್ಟ್ ಸೂಚಿಸಿದೆ.
ದೇಶದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು, ಊರುಗಳಿಗೆ ಹೋಗುವುದಕ್ಕಾಗಿ ಬಹಳ ಕಷ್ಟಪಟ್ಟಿದ್ದರು. ಸಾರಿಗೆ ವ್ಯವಸ್ಥೆ ಇಲ್ಲದೇ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಜಮಾಯಿಸಿದ್ದರು. ಅನೇಕ ಕಡೆ ಪೊಲೀಸರು ಮತ್ತು ಕಾರ್ಮಿಕರ ನಡುವೆ ಕಲ್ಲುತೂರಾಟ, ಘರ್ಷಣೆ, ಗಲಭೆಗಳು ನಡೆದಿದೆ.

ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕಾರ್ಮಿಕರ ವಿರುದ್ಧ ಕೇಸ್ ದಾಖಲಾಗಿದೆ. ಅದರಲ್ಲಿ ಅನೇಕರನ್ನು ಬಂಧಿಸಲಾಗಿದೆ. ಇದೀಗ, ಸುಪ್ರೀಂಕೋರ್ಟ್ ಕಾರ್ಮಿಕರ ಪರ ಆದೇಶ ನೀಡಿದ್ದು, ನಿಟ್ಟುಸಿರು ಬಿಡುವಂತಾಗಿದೆ.
ಇನ್ನು ವಲಸೆ ಕಾರ್ಮಿಕರು ತಮ್ಮ ಮನೆಗೆ ಮರಳಲು ಅನುಕೂಲವಾಗುವಂತೆ ಶ್ರಮಿಕ್ ವಿಶೇಷ ರೈಲುಗಳನ್ನು 24 ಗಂಟೆಗಳ ಕಾಲ ಸಂಚರಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಜೊತೆಗೆ 15 ದಿನಗಳಲ್ಲಿ ಕಾರ್ಮಿಕರ ಸ್ಥಳಾಂತರ ಕೆಲಸ ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಲಾಕ್ಡೌನ್ನಿಂದಾಗಿ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಹಾಗಾಗಿ, ರಾಜ್ಯ ಸರ್ಕಾರ ಮತ್ತು ಕೇಂದ್ರಡಾಳಿತ ಪ್ರದೇಶ ಸರ್ಕಾರಗಳು ವಲಸಿಗರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಸೂಚಿಸಿದೆ.












Click it and Unblock the Notifications