ದೆಹಲಿಗೆ ರಾಯಭಾರಿ ಕಳಿಸಿದ ಬಿಎಸ್ವೈ!

ಬುಧವಾರ ಮಧ್ಯಾಹ್ನ ಲೆಹರ್ ಸಿಂಗ್ ನವದೆಹಲಿ ತಲುಪಿದ್ದಾರೆ. ಬಿಜೆಪಿ ರಾಷ್ಟ್ರಧ್ಯಕ್ಷ ರಾಜನಾಥ್ ಸಿಂಗ್, ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತು ಅರುಣ್ ಜೇಟ್ಲಿಯೊಂದಿಗೆ ಲೆಹರ್ ಸಿಂಗ್ ಮಾತುಕತೆ ನಡೆಸಲಿದ್ದು, ಕೆಜೆಪಿ ಮತ್ತು ಬಿಜೆಪಿ ವಿಲೀನದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಕಳೆದ ವರ್ಷದ ಡಿಸೆಂಬರ್ ನಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿ ಕರ್ನಾಟಕ ಜನತಾ ಪಕ್ಷ ಸ್ಥಾಪಿಸಿದ್ದ ಯಡಿಯೂರಪ್ಪ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ ಮತ್ತೆ ಬಿಜೆಪಿಗೆ ಮರಳಲು ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.
ಅತ್ತ ಕರ್ನಾಟಕದ ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ವೇಳೆಗೆ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತೆಬೇಕು ಎಂಬ ಪ್ರಯತ್ನದಲ್ಲಿ ತೊಡಗಿದ್ದಾರೆ. ಬುಧವಾರ ಮತ್ತು ಗುರುವಾರ ಕೆಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ? ಕೆಜೆಪಿ? ಬಗ್ಗೆ ಅಂತಿಮ ನಿರ್ಧಾರವನ್ನು ಯಡಿಯೂರಪ್ಪ ಕೈಗೊಳ್ಳುವ ಸಾಧ್ಯತೆ ಇದೆ.
ಬುಧವಾರ ಸಂಜೆ ಲೆಹರ್ ಸಿಂಗ್, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜೇಟ್ಲಿ ಜೊತೆ ಮಾತುಕತೆ ನಡೆಸಿದ ಬಳಿಕ, ಅಡ್ವಾಣಿ ಅವರ ಭೇಟಿಗೂ ಕಾಲಾವಕಾಶ ಕೋರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಬುಧವಾರ ರಾತ್ರಿ ಅಥವ ಗುರುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಲೆಹರ್ ಸಿಂಗ್ ಭೇಟಿ ಮಾಡಲಿದ್ದಾರೆ. ಎಲ್ಲಾ ನಾಯಕರ ಭೇಟಿ ಮುಗಿಸಿ ಲೆಹರ್ ಸಿಂಗ್ ಗುರುವಾರ ಸಂಜೆ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ.
ಬುಧವಾರ ಮತ್ತು ಗುರುವಾರ ಪಕ್ಷದ ನಾಯಕರ ಸಭೆ ನಡೆಲಿರುವ ಬಿ.ಎಸ್.ಯಡಿಯೂರಪ್ಪ ಗುರುವಾರ ಸಂಜೆ ಲೆಹರ್ ಸಿಂಗ್ ಜೊತೆ ಮಾತುಕತೆ ನಡೆಸಲಿರುವ ಯಡಿಯೂರಪ್ಪ ನಂತರ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ. (ಪಿಟಿಐ)












Click it and Unblock the Notifications