ನಾನು ಈಗ ನಿರಾಳನಾಗಿದ್ದೇನೆ : ಯಡಿಯೂರಪ್ಪ
ನವದೆಹಲಿ, ಜ.18 : ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಡ್ವಾಣಿ ಅವರನ್ನು ಭೇಟಿ ಮಾಡಿದ ನಂತರ ತಾವು ನಿರಾಳರಾಗಿದ್ದು, ಪಕ್ಷ ಸಂಘಟನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.
ನವದೆಹಲಿಯಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶನಿವಾರ ಮುಂಜಾನೆ ಎಲ್.ಕೆ.ಅಡ್ವಾಣಿ ಅವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ವಾಣಿ ಭೇಟಿ ಮಾಡಿದ ನಂತರ ತಾವು ನಿರಾಳರಾಗಿದ್ದು, ಪಕ್ಷ ಸಂಘಟನೆಯಲ್ಲ ತೊಡಿಸಿಕೊಳ್ಳಲಿದ್ದೇನೆ ಎಂದರು.

ಬಿಜೆಪಿಗೆ ಮರಳಿದ ನಂತರ ಮೊದಲ ಬಾರಿಗೆ ಎಲ್ಲಾ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದೆ. ಎಲ್ಲರೂ ಆತ್ಮೀಯವಾಗಿ ನನ್ನನ್ನು ಸ್ವಾಗತಿಸಿದರು. ಎಲ್.ಕೆ.ಅಡ್ವಾಣಿ ಮತ್ತು ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು. [ಅಭ್ಯರ್ಥಿಗಳ ಪಟ್ಟಿ ಬದಲು!]
ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಸಮಯದಲ್ಲಿ ದೇಶದ ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲು ರಾಜ್ಯ ನಾಯಕರ ಜೊತೆ ಒಟ್ಟಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ಕುರಿತು ಮೋದಿ ಮತ್ತು ಅಡ್ವಾಣಿ ಅವರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಹಳೆದೆಲ್ಲವನ್ನು ಮರೆತು ಎಲ್ಲರೂ ಒಂದಾಗಿದ್ದೇವೆ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ರಾಷ್ಟ್ರೀಯ ನಾಯಕರ ಭೇಟಿಯಿಂದ ನಿರಾಳವಾಗಿದೆ ಎಂದು ಹೇಳಿದರು.
ಪ್ರಚಾರ ಸಮಿತಿ ಉಸ್ತುವಾರಿ : ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮತಿ ಅಧ್ಯಕ್ಷ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರು ಯಡಿಯೂರರಪ್ಪ ಅವರ ಸ್ಥಾನಮಾನದ ಕುರಿತು ಚರ್ಚೆ ನಡೆಸಿದ್ದಾರೆ. ಈ ಸಮಯದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನದ ನೀಡುವ ಕುರಿತು ಚರ್ಚೆ ನಡೆಸಲಾಗಿದ್ದು, ಶೀಘ್ರದಲ್ಲೇ ಅದನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.












Click it and Unblock the Notifications