ಗೋವಾ ಸಿಎಂ ಆಯ್ಕೆ; ಬಿಜೆಪಿಯಿಂದ ವೀಕ್ಷಕರ ನೇಮಕ
ಪಣಜಿ, ಮಾರ್ಚ್ 14; ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 20 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಮೂವರು ಪಕ್ಷೇತರರು, ಇಬ್ಬರು ಎಂಜಿಪಿ ಶಾಸಕರ ಬಲದಿಂದ ಸರ್ಕಾರ ರಚನೆ ಮಾಡಲಿದೆ.
ಗೋವಾ ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ಗಣೇಶ್ ಗಾಂವ್ಕರ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮಂಗಳವಾರ ಬೆಳಗ್ಗೆ 11.30ಕ್ಕೆ ವಿಧಾನಸಭೆ ಕಲಾಪ ಆರಂಭವಾಗಲಿದ್ದು, ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ
ಬಿಜೆಪಿ ಮುಖ್ಯಮಂತ್ರಿ ಯಾರು ಎಂಬುದನ್ನು ಇನ್ನೂ ಗೌಪ್ಯವಾಗಿಟ್ಟಿದೆ. ಹೊಸ ಸರ್ಕಾರ ರಚನೆಯಾದಾಗ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರಾ?, ಬೇರೆ ನಾಯಕನನ್ನು ಆಯ್ಕೆ ಮಾಡಲಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.
ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ!
ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ. ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದೆ. ಇದರಿಂದಾಗಿ ಬಿಜೆಪಿ ಬಲ 25 ಆಗಲಿದ್ದು, ಸರ್ಕಾರ ರಚನೆ ಮಾಡುವುದಾಗಿ ಪಕ್ಷ ಘೋಷಣೆ ಮಾಡಿದೆ.
ಗೋವಾ ಚುನಾವಣೆ; ಜನರ ತೀರ್ಪು ಒಪ್ಪಿಕೊಂಡ ಕಾಂಗ್ರೆಸ್ ನಾಯಕರು
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕೇಂದ್ರ ಸಚಿವ ಪಿಯೂಷ್ ಘೋಯೆಲ್ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಸೋಮವಾರ ಸಂಜೆ ಇಬ್ಬರು ನಾಯಕರು ಪಣಜಿಗೆ ಆಗಮಿಸಲಿದ್ದಾರೆ.
ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಯಾರಾಗಲಿದ್ದಾರೆ ಸಿಎಂ?; ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಯೇ? ಅಥವ ಬೇರೆ ನಾಯಕನ ಆಯ್ಕೆ ನಡೆಯಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ದಿನದಿಂದ ವಿಶ್ವಜಿತ್ ರಾಣೆ ಹೆಸರು ಸಿಎಂ ರೇಸ್ನಲ್ಲಿ ಕೇಳಿ ಬರುತ್ತಿದೆ.
ಶನಿವಾರ ವಿಶ್ವಜಿತ್ ರಾಣೆ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಸಿಎಂ ರೇಸ್ ಬಗ್ಗೆ ಪ್ರಶ್ನಿಸಿದಾಗ, "ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷದ ಸೂಚನೆಯಂತೆ ಕಾರ್ಯ ನಿರ್ವಹಣೆ ಮಾಡುತ್ತೇನೆ" ಎಂದು ಹೇಳಿದ್ದರು.
ಗೋವಾ ಬಿಜೆಪಿ ಘಟಕ ಪ್ರಮೋದ್ ಸಾವಂತ್ ಅವರೇ ಸಿಎಂ ಆಗಿ ಮುಂದುವರೆಯಲಿ ಎಂದು ಶಿಫಾರಸು ಮಾಡಿದೆ. ಹೈಕಮಾಂಡ್ ನಾಯಕರು ಶಾಸಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.
ಬಿಜೆಪಿ ಗೋವಾದಲ್ಲಿ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದೆ. ಈ ಹಿಂದೆ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿದ್ದರು. 2019ರಲ್ಲಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾದರು.
ಮನೋಹರ್ ಪರಿಕ್ಕರ್ ಇಲ್ಲದೇ ನಡೆದ ಚುನಾವಣೆಯಲ್ಲಿಯೂ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರಮೋದ್ ಸಾವಂತ್ ಆಡಳಿತವನ್ನು ಜನರು ಮೆಚ್ಚಿದ್ದಾರೆ ಎಂದೇ ಅರ್ಥ. ಆದ್ದರಿಂದ ಸಿಎಂ ಬದಲಾವಣೆ ಮಾಡುವುದಿಲ್ಲ ಎಂಬುದು ನಿರೀಕ್ಷೆ ಯಾಗಿದೆ.
ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆ ಬಳಿಕ ಪ್ರಮಾಣ ವಚನ ಸ್ವೀಕಾರದ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.
ಮಂಗಳವಾರ ವಿಧಾನಸಭೆ ಕಲಾಪ ಆರಂಭವಾಗಲಿದ್ದು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮೂವರು ಪಕ್ಷೇತರರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡುವುದರಿಂದ ಅವರಿಗೆ ಸಹ ಸಚಿವ ಸ್ಥಾನ ನೀಡಬೇಕಿದೆ.