ಗೋವಾ ಚುನಾವಣೆ; ಜನವರಿ 19ರಂದು ಬಿಜೆಪಿ ಅಭ್ಯರ್ಥಿಗಳು ಘೋಷಣೆ
ಪಣಜಿ, ಜನವರಿ 17; "ಗೋವಾದಲ್ಲಿ 22+ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲಿದೆ" ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.
ಗೋವಾ ವಿಧಾನಸಭೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ನವದೆಹಲಿಯಲ್ಲಿ ಸಭೆ ನಡೆಯಿತು. ರಾಜ್ಯ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಜಿ. ಕೃಷ್ಣಾ ರೆಡ್ಡಿ, ಪ್ರಮೋದ್ ಸಾವಂತ್ ಮುಂತಾದವರು ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಮಾತನಾಡಿದ ಪ್ರಮೋದ್ ಸಾವಂತ್, "ಗೋವಾದ 40 ಸ್ಥಾನಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜನವರಿ 19ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ" ಎಂದು ಹೇಳಿದರು.

ಕಳೆದ ವಾರ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 38 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಸಂದದೀಯ ಮಂಡಳಿಗೆ ಕಳಿಸಲಾಗಿತ್ತು.
ಭಾನುವಾರ ಸಂಸದೀಯ ಮಂಡಳಿ ಸಭೆಯಲ್ಲಿ ಗೋವಾ, ಉತ್ತರಾಖಂಡ ರಾಜ್ಯಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಯಿತು. ಸಂಜೆ 6 ಗಂಟೆಗೆ ಆರಂಭವಾದ ಸಭೆ 10 ಗಂಟೆ ತನಕ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.
ಗೋವಾದ 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಕ್ರಿಶ್ಚಿಯನ್ ಪ್ರಾಬಲ್ಯ ಹೊಂದಿರುವ ಬೆನೌಲಿಮ್ ಮತ್ತು ನುವೆಮ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.
ಉಳಿದ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಜ್ಯದ 40 ಸ್ಥಾನಗಳಲ್ಲಿಯೂ ಬಿಜೆಪಿ ಸ್ಪರ್ಧೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ. 2017ರ ಚುನಾವಣೆಯಲ್ಲಿಯೂ ಪಕ್ಷ 38 ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕಿಳಿದಿತ್ತು.
ಗೋವಾ ಜನರಿಗೆ ಏನೂ ಕೊಡಲು ಸಾಧ್ಯವಿಲ್ಲ; ಶನಿವಾರ ಮತ್ತು ಭಾನುವಾರ ಗೋವಾದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಾಗ್ದಾಳಿ ನಡೆಸಿದ್ದಾರೆ.
"ಕೇಜ್ರಿವಾಲ್ ಗೋವಾದ ಜನರಿಗೆ ಏನೂ ಕೊಡಲು ಸಾಧ್ಯವಿಲ್ಲ. ಅವರು ಕನಸುಗಳನ್ನು ಮಾರಾಟ ಮಾಡುತ್ತಿದ್ದಾರೆ" ಎಂದು ಟೀಕಿಸಿದರು. ಭಾನುವಾರ ಗೋವಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಅರವಿಂದ ಕೇಜ್ರಿವಾಲ್ ಗೋವಾ ಜನರಿಗಾಗಿ 13 ಅಂಶಗಳ ಕಾರ್ಯಕ್ರಮ ಘೋಷಣೆ ಮಾಡಿದ್ದರು.
"ಅರವಿಂದ್ ಕೇಜ್ರಿವಾಲ್ ಉದ್ಯೋಗ, ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ನಕಲಿ ಭರವಸೆಗಳನ್ನು ನೀಡುತ್ತಿದ್ದಾರೆ. ಅವರ ರಾಜ್ಯದಲ್ಲಿಯೇ ನೀಡಿದ ಭರವಸೆಯಂತೆ ಎಷ್ಟು ಜನರಿಗೆ ಆರ್ಥಿಕ ನೆರವು ನೀಡಲಾಗಿದೆ?" ಎಂದು ಪ್ರಶ್ನಿಸಿದರು.
"ಮುಖ್ಯಮಂತ್ರಿಗಳು ಜನರ ಹಣವನ್ನು ತಮ್ಮ ಜಾಹೀರಾತಿಗಾಗಿ ಉಪಯೋಗ ಮಾಡುತ್ತಿದ್ದಾರೆ. ದೆಹಲಿಯ ಜನರ ತೆರಿಗೆ ಹಣವನ್ನು ಗೋವಾದ ಚುನಾವಣೆಗೆ ಬಳಕೆ ಮಾಡುತ್ತಿದ್ದಾರೆ. ಅವರು ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದಿಲ್ಲ" ಎಂದರು.
ಗೋವಾ ವಿಧಾನಸಭೆ ಚುನಾವಣೆಗೆ ಎಎಪಿ ಮೊದಲ ಬಾರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಈಗಾಗಲೇ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅರವಿಂದ ಕೇಜ್ರಿವಾಲ್ ಶನಿವಾರ ಮತ್ತು ಭಾನುವಾರ ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ.
ಚುನಾವಣಾ ಪೂರ್ವ ಸಮೀಕ್ಷೆಗಳು ರಾಜ್ಯದಲ್ಲಿ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಸ್ಥಾನ ಪಡೆಯಲಿದೆ ಎಂದು ಹೇಳಿದೆ. ಇವು ಪಕ್ಷದ ಕಾರ್ಯಕರ್ತರ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.
ಮೈತ್ರಿ ಇಲ್ಲ; "ಗೋವಾದಲ್ಲಿ ಟಿಎಂಸಿ ಸೇರಿದಂತೆ ಯಾವುದೇ ಪಕ್ಷಗಳ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಅರವಿಂದ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯದ ಜನರ ತೀರ್ಪು ಇನ್ನೂ ಬಂದಿಲ್ಲ. ಚುನಾವಣೆ ಬಳಿಕ ಬಿಜೆಪಿಯೇತರ ಪಕ್ಷಗಳ ಜೊತೆ ಮೈತ್ರಿಗೆ ಸಿದ್ಧವಾಗಿದ್ದೇವೆ" ಎಂದು ಹೇಳಿದ್ದಾರೆ.












Click it and Unblock the Notifications