ಗೋವಾ; ಮೂವರು ಬಿಜೆಪಿ ನಾಯಕರು ಪಕ್ಷೇತರರಾಗಿ ಕಣಕ್ಕೆ!
ಪಣಜಿ, ಜನವರಿ 21; ಗೋವಾ ವಿಧಾನಸಭೆ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಿದೆ. ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಗುರುವಾರ 40 ಕ್ಷೇತ್ರಗಳ ಪೈಕಿ 34 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಟಿಕೆಟ್ ಘೋಷಣೆ ಬಳಿಕ ಅಸಮಾಧಾನವೂ ಭುಗಿಲೆದ್ದಿದೆ.
ಟಿಕೆಟ್ ಆಕಾಂಕ್ಷಿಯಾಗಿದ್ದ ಮೂವರು ಬಿಜೆಪಿ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಬಂಡಾಯ ಶಮನ ಮಾಡುವುದು ಗೋವಾ ಬಿಜೆಪಿಗೆ ಸವಾಲಾಗಿದೆ.

ಈ ಮೂವರು ನಾಯಕರಲ್ಲಿ ಗೋವಾದ ಮಾಜಿ ಮುಖ್ಯಂತ್ರಿ ಚಂದ್ರಕಾಂತ್ ಕವಳೇಕರ್ ಪತ್ನಿ ಸಾವಿತ್ರಿ ಕವಳೇಕರ್ ಸಹ ಸೇರಿದ್ದಾರೆ. ಟಿಕೆಟ್ ಕೈ ತಪ್ಪಿದ ಬಳಿಕ ಗೋವಾ ಮಹಿಳಾ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಕವಳೇಕರ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ದೀಪಕ್ ಪೌಸ್ಕರ್ ರ್ಸ್ಯಾನ್ವೋರ್ಡೆಮ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಕಾರಣ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2017ರ ಚುನಾವಣೆಯಲ್ಲಿ ದೀಪಕ್ ಪೌಸ್ಕರ್ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ)ದಿಂದ ಚುನಾವಣೆಯಲ್ಲಿ ಗೆದ್ದು ಬಂದಿದ್ದರು. ಪಕ್ಷ ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡಿದ್ದರಿಂದ ದೀಪಕ್ ಪೌಸ್ಕರ್ಗೆ ಸಚಿವ ಸ್ಥಾನ ಸಿಕ್ಕಿತ್ತು.
ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದೀಪಕ್ ಪೌಸ್ಕರ್ ಫೆಬ್ರವರಿ 14ರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಗಣೇಶ್ ಚಂದ್ರ ಗಾಂವ್ಕರ್ ಸ್ಯಾನ್ವೋರ್ಡೆಮ್ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿದೆ.
ಗೋವಾ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಇಸಿಡೋರ್ ಫರ್ನಾಂಡಿಸ್ ಸಹ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಇವರು ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಗೋವಾ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಸಹ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಸಹ ಬಿಜೆಪಿ ಬಿಟ್ಟಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುನ್ನವೇ ಪಕ್ಷದ ನುವೇಂ ಕ್ಷೇತ್ರದ ಶಾಸಕ ವಿಲ್ಫರ್ಡ್ ಡಿಸೋಜಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಸಹ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಗೋವಾ ವಿಧಾನಸಭೆ ಸ್ಪೀಕರ್ ಮತ್ತು ಬಿಚ್ಚೋಲಿಯಂ ಕ್ಷೇತ್ರದ ಹಾಲಿ ಶಾಸಕರಾದ ರಾಜೇಶ್ ಪಟೇನ್ನಕರ್ ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.
40 ಕ್ಷೇತ್ರಗಳಲ್ಲೂ ಕಣಕ್ಕೆ; ಇದೇ ಮೊದಲ ಬಾರಿಗೆ ಗೋವಾ ಬಿಜೆಪಿ ರಾಜ್ಯದ 40 ಸ್ಥಾನಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈಗಾಗಲೇ ಗುರುವಾರ 34 ಕೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಉಳಿದ ಕ್ಷೇತ್ರಗಳಿಗೆ ಮುಂದಿನ ವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. "22+ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೆ ನಾವು ಅಧಿಕಾರ ಪಡೆಯಲಿದ್ದೇವೆ" ಎಂದು ಅವರು ಹೇಳಿದ್ದಾರೆ.
ಪರಿಕ್ಕರ್ ಪುತ್ರನಿಗೆ ಟಿಕೆಟ್; ಇನ್ನೂ ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ಕೈತಪ್ಪಿದೆ. ಅವರಿಗೆ 2 ಕ್ಷೇತ್ರಗಳ ಆಯ್ಕೆಯನ್ನು ಬಿಜೆಪಿ ಹೈಕಮಾಂಡ್ ನೀಡಿದೆ. ಆದರೆ ಇನ್ನೂ ಅವರು ಬೇರೆ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ.












Click it and Unblock the Notifications