ಮಹದಾಯಿ ವಿವಾದ; ಗೋವಾ ಸಿಎಂ ಸ್ಫೋಟಕ ಹೇಳಿಕೆ
ಪಣಜಿ, ನವೆಂಬರ್ 19 : ಮಹದಾಯಿ ವಿವಾದದ ವಿಚಾರದಲ್ಲಿ ಗೋವಾ ಸರ್ಕಾರ ಮತ್ತೊಮ್ಮೆ ಕ್ಯಾತೆ ತೆಗೆದಿದೆ. ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೈಗೊಳ್ಳಲಿರುವ ಮಹದಾಯಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅಕ್ಟೋಬರ್ ತಿಂಗಳಿನಲ್ಲಿ ಅನುಮತಿ ನೀಡಿತ್ತು.
" ಮಹದಾಯಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ತಾಳ್ಮೆಯಿಂದ ಇರಿ. ಮಹದಾಯಿ ನದಿಯಿಂದ ನೀರನ್ನು ಹಂಚಿಕೆ ಮಾಡಲು ಸರ್ಕಾರ ಒಪ್ಪಿಗೆ ನೀಡುವುದಿಲ್ಲ" ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.
ಮಹದಾಯಿ ನದಿಯಿಂದ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕ ಭಾಗದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅಕ್ಟೋಬರ್ 17ರಂದು ಒಪ್ಪಿಗೆ ನೀಡಿತ್ತು. ಇದರ ವಿರುದ್ಧ ಗೋವಾದಲ್ಲಿ ಪ್ರತಿಭಟನೆ ನಡೆದಿತ್ತು.

"ಮಹದಾಯಿ ವಿಚಾರದಲ್ಲಿ ತಾಳ್ಮೆಯಿಂದ ಇರಿ. ಯೋಜನೆ ವಿಚಾರದಲ್ಲಿ ಸರ್ಕಾರ ಒಪ್ಪಿಗೆ ನೀಡುವುದಿಲ್ಲ. ಮಹದಾಯಿ ನದಿ ನೀರು ತಿರುವು ಯೋಜನೆಗೆ ಸರ್ಕಾರ ಅನುಮತಿ ನೀಡುವುದಿಲ್ಲ" ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.
ನವೆಂಬರ್ 4ರಂದು ಪ್ರಮೋದ್ ಸಾವಂತ್ ನೇತೃತ್ವದ ಸರ್ವಪಕ್ಷಗಳ ನಿಯೋಗ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಭೇಟಿ ಯಾಗಿತ್ತು. ಮಹದಾಯಿ ಯೋಜನೆಗೆ ಒಪ್ಪಿಗೆ ನೀಡಿರುವುದನ್ನು ವಾಪಸ್ ಪಡೆಯಬೇಕು ಎಂದು ಮನವಿ ಸಲ್ಲಿಸಿತ್ತು.
ಮಹದಾಯಿ ನದಿ ನೀರನ್ನು ಉಪಯೋಗಿಸಕೊಂಡು ಕಳಸಾ-ಬಂಡೂರಿ ಯೋಜನೆ ಜಾರಿಗೊಳಿಸಲು ಯಾವುದೇ ತಕರಾರು ಇಲ್ಲ ಎಂದು ಪರಿಸರ ಇಲಾಖೆ ಹೇಳಿತ್ತು. ಆದರೆ, ಕರ್ನಾಟಕ ಮತ್ತು ಗೋವಾ ರಾಜ್ಯದ ನಡುವೆ ಯೋಜನೆ ವಿಚಾರದಲ್ಲಿ ಮೊದಲಿನಿಂದಲೂ ಜಟಾಪಟಿ ನಡೆಯುತ್ತಿದೆ.
ಮಹದಾಯಿ ನದಿಯಿಂದ 5.5 ಟಿಎಂಸಿ ಅಡಿ ನೀರನ್ನು ಬಳಸಿಕೊಂಡು ಕಳಸಾ-ಬಂಡೂರಿ ನಾಲೆಗಳ ಮೂಲಕ ಮಲಪ್ರಭಾ ನದಿಗೆ ಹರಿಸಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವುದು ಯೋಜನೆಯಾಗಿದೆ.
ಮಹದಾಯಿ ನ್ಯಾಯಾಧೀಕರಣ ವಿವಾದದ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿತ್ತು. 2018ರಲ್ಲಿ ತೀರ್ಪನ್ನು ನೀಡಿತ್ತು. ಕರ್ನಾಟಕಕ್ಕೆ 13.4 ಟಿಎಂಸಿ ನೀರನ್ನು ಹಂಚಿಕೆ ಮಾಡಿತ್ತು. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರ ಸಮನ್ವಯತೆಯಿಂದ ಯೋಜನೆ ಜಾರಿಗೊಳಿಸಬಹುದು ಎಂದು ಹೇಳಿತ್ತು.
ಮಹದಾಯಿ ನ್ಯಾಯಾಧೀಕರಣ ಅಂತಿಮ ತೀರ್ಪಿನಲ್ಲಿ ಕರ್ನಾಟಕಕ್ಕೆ 13.4, ಗೋವಾಕ್ಕೆ 24 ಟಿಎಂಸಿ, ಮಹಾರಾಷ್ಟ್ರ ರಾಜ್ಯಕ್ಕೆ 1.3 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿತ್ತು. ರಾಜ್ಯದ ಪಾಲಿನ ನೀರಿನಲ್ಲಿ 4 ಟಿಎಂಸಿ ಅಡಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಬಹುದು ಎಂದು ಅಂತಿಮ ತೀರ್ಪಿನಲ್ಲಿ ಹೇಳಿತ್ತು.












Click it and Unblock the Notifications