ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್
ಪಣಜಿ, ಮಾರ್ಚ್ 16; ಗೋವಾದ ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದೆ.
ಬುಧವಾರ ಪ್ರಮೋದ್ ಸಾವಂತ್ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗೋವಾ ಸಿಎಂ ಆಯ್ಕೆ; ಬಿಜೆಪಿಯಿಂದ ವೀಕ್ಷಕರ ನೇಮಕ
ನಮ್ಮ ಪಕ್ಷವನ್ನು ಮತ್ತೆ ಬೆಂಬಲಿಸಿದ ಗೋವಾ ಜನರಿಗೆ ಧನ್ಯವಾದಗಳು. ರಾಜ್ಯದ ಅಭಿವೃದ್ಧಿಗೆ, ಗೋವಾದ ಜನರಿಗಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ!
ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿಗೆ ಪ್ರಮೋದ್ ಸಾವಂತ್ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆದಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಿತ್ತು.
ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ
ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದೆ. ಆದರೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಯಾವ ಪಕ್ಷಕ್ಕೂ ಸಿಕ್ಕಿಲ್ಲ. ಮೂವರು ಪಕ್ಷೇತರರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಬಲ 25ಕ್ಕೆ ಏರಿಕೆಯಾಗಿದ್ದು, ಸರ್ಕಾರ ರಚನೆ ಮಾಡಲಿದೆ. ಶನಿವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ.
ಗೋವಾ ಫಲಿತಾಂಶ; 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ.
ಮುಖ್ಯಮಂತ್ರಿ ಯಾರು?; ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷೇತರರು ಮತ್ತು ಎಂಜಿಪಿ ಪಕ್ಷದ ನೆರವಿನಿಂದ ಸರ್ಕಾರ ರಚನೆ ಮಾಡುವುದಾಗಿ ಹೇಳಿದೆ. ಆದರೆ ಮುಖ್ಯಮಂತ್ರಿ ಯಾರು? ಎಂಬುದು ಇನ್ನೂ ನಿಗೂಢವಾಗಿಯೇ ಇದೆ.
ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಯೇ? ಅಥವ ಹೊಸ ನಾಯಕನ ಆಯ್ಕೆ ನಡೆಯಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಹೊಸ ಶಾಸಕರ ಪ್ರಮಾಣ ವಚನ ನಡೆದಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ನಡೆದಿಲ್ಲ.
ಬಿಜೆಪಿ ಹೈಕಮಾಂಡ್ ಬಿ. ಎಲ್. ಸಂತೋಷ್ ಮತ್ತು ಸಚಿವ ಪಿಯೂಷ್ ಘೋಯೆಲ್ರನ್ನು ಗೋವಾ ವೀಕ್ಷಕರಾಗಿ ನೇಮಕ ಮಾಡಿದೆ. ಆದರೆ ಹೋಳಿ ಹಬ್ಬದ ಬಳಿಕ ವೀಕ್ಷಕರು ಗೋವಾಕ್ಕೆ ಭೇಟಿ ನೀಡಲಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಸಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ.
2ನೇ ಅವಧಿಗೆ ಆಯ್ಕೆ; ಪ್ರಮೋದ್ ಸಾವಂತ್ ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೂ ಮುಂದುವರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ದಿನದಿಂದ ಈ ಹಿಂದೆ ಆರೋಗ್ಯ ಸಚಿವರಾಗಿದ್ದ ವಿಶ್ವಜಿತ್ ರಾಣೆ ಹೆಸರು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ. ಆದರೆ ಗೋವಾ ಬಿಜೆಪಿ ಘಟಕ ಪ್ರಮೋದ್ ಸಾವಂತ್ ಮುಂದುವರೆಯಬೇಕು ಎಂದು ಹೈಕಮಾಂಡ್ ನಾಯಕರಿಗೆ ಶಿಫಾರಸು ಮಾಡಿದೆ.
2019ರಲ್ಲಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿದ್ದರು. ಈ ಬಾರಿಯ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಾಗಿತ್ತು.