ಪ್ರವಾಸಿ ರಾಹುಲ್ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ: ಪ್ರಮೋದ್ ಸಾವಂತ್
ಪಣಜಿ, ಫೆಬ್ರವರಿ 5: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾಗೆ ಓರ್ವ ಪ್ರವಾಸಿಯಾಗಿ, ರಜಾ ದಿನಗಳನ್ನು ಕಳೆಯಲು ಬಂದಂತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಅವರು ಗೋವಾದ ಬೆಳವಣಿಗೆಗಳನ್ನು ನೋಡುತ್ತಿಲ್ಲ, ಅವರು ಏನು ಮಾಡುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ರಾಹುಲ್ ಗೋವಾ ಭೇಟಿ ಕುರಿತು ಪ್ರಮೋದ್ ಸಾವಂತ್ ಹೇಳಿದ್ದಾರೆ.
ಇನ್ನು ರಾಹುಲ್ ಗಾಂಧಿ ಪಣಜಿಗೆ ಭೇಟಿ ನೀಡಿದ್ದು, ಚುನಾವಣಾ ಪ್ರಚಾರ ನಡೆಸಿದರು. ಬಳಿಕ ಮಾತನಾಡಿ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಕ್ಷೇತ್ರ ಸಾಂಕಾಲಿಯಲ್ಲಿ ವರ್ಚುಯಲ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಮಾತ್ರ ಹೋರಾಟವಿದ್ದು, ಇತರ ಪಕ್ಷಗಳೊಂದಿಗೆ ಇಲ್ಲ, ಆದ್ದರಿಂದ ನಿಮ್ಮ ಮತವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಮತದಾರರಿಗೆ ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕೋವಿಡ್-19 ನಿರ್ವಹಣೆ, ಜನರ ಜೀವನ ಸುಧಾರಣೆ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೇಸರಿ ಪಕ್ಷ ಸಂಪೂರ್ಣವಾಗಿ ವಿಫಲವಾಗಿದೆ. ಗೋವಾದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಮತದಾರರ ನೆರವಿನಿಂದ ಗೋವಾದಲ್ಲಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುವುದನ್ನು ನಾವು ಬಯಸಿದ್ದೇವೆ ಎಂದರು.
ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಮತ ನೀಡಿ ಎಂದು ಮನವಿ ಮಾಡಿದ ರಾಹುಲ್ ಗಾಂಧಿ, ಈ ಬಾರಿ ನಮ್ಮ ಬೆನ್ನಿಗೆ ಚೂರಿ ಹಾಕಿದ ಪಕ್ಷಾಂತರಿಗಳಿಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ದೃಢ ನಿಲುವು ತಳೆದಿದೆ. ಹೊಸಬರಿಗೆ ಟಿಕೆಟ್ ನೀಡಿದ್ದೇವೆ. ಪೂರ್ಣ ಬಹುಮತದೊಂದಿಗೆ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದರು.
ಶುಕ್ರವಾರ ಕಾಂಗ್ರೆಸ್ ಮತ್ತು ಗೋವಾ ಫಾರ್ವರ್ಡ್ ಪಕ್ಷದ ಎಲ್ಲಾ 40 ಅಭ್ಯರ್ಥಿಗಳು ರಾಹುಲ್ ಗಾಂಧಿ ಸಮ್ಮುಖದಲ್ಲಿ ಒಗ್ಗಟ್ಟಿನಿಂದ ಮತ್ತು ಕಾಂಗ್ರೆಸ್ಗೆ ನಿಷ್ಠರಾಗಿರುವುದಾಗಿ ಪ್ರತಿಜ್ಞೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications