ಗೋವಾದಲ್ಲಿ ಮುಖ್ಯಮಂತ್ರಿ ಬದಲಾಯಿಸಲಿದೆ ಬಿಜೆಪಿ?
ಪಣಜಿ, ಮಾರ್ಚ್ 10; ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಂದ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಮಾಡಲು ಪಕ್ಷ ಹಕ್ಕು ಮಂಡನೆ ಮಾಡಲಿದೆ. ಆದರೆ ಮುಖ್ಯಮಂತ್ರಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆದಿತ್ತು. ಗುರುವಾರ ಫಲಿತಾಂಶ ಪ್ರಕಟವಾಗಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 21. ಬಿಜೆಪಿಗೆ ಬಹುಮತ ಬಂದಿಲ್ಲ. ಪಕ್ಷೇತರ ಅಭ್ಯರ್ಥಿಗಳ ಬೆಂಬಲದಿಂದ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ.
ಗೋವಾ ಫಲಿತಾಂಶ; ದೆಹಲಿ, ಮುಂಬೈನಲ್ಲಿ ಸಿದ್ಧವಾಗುತ್ತಿದೆ ತಂತ್ರ!
ಆದರೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಅಷ್ಟು ಸುಲಭವಾಗಿಲ್ಲ. ಸದ್ಯ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್. ಆದರೆ ವಿಶ್ವಜಿತ್ ರಾಣೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ರಾಜ್ಯದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ ಮಾಡಲಿದಯೇ? ಕಾದು ನೋಡಬೇಕು.
ಪಂಚರಾಜ್ಯ ಫಲಿತಾಂಶ: ರಾಜ್ಯ ಬಿಜೆಪಿಯಲ್ಲಿ ಸಂಭ್ರಮಾಚರಣೆ
ವಿಶ್ವಜಿತ್ ರಾಣೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ. ಈ ಬಾರಿ ಸರ್ಕಾರ ರಚನೆಯಾದಾಗ ಪ್ರಮೋದ್ ಸಾವಂತ್ ಬದಲು ವಿಶ್ವಜಿತ್ ರಾಣೆ ಮುಖ್ಯಮಂತ್ರಿಯಾಗಬಹುದು ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಕುರಿತು ಯಾವುದೇ ನಾಯಕರು ಪ್ರತಿಕ್ರಿಯೆ ನೀಡಿಲ್ಲ.
ಪಂಚ ರಾಜ್ಯಗಳ ಚುನಾವಣೆ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಹೇಳಿದ್ದು ಹೀಗೆ..
ಬಿಜೆಪಿ ಸ್ಥಳೀಯ ಘಟಕ ಪ್ರಮೋದ್ ಸಾವಂತ್ಗೆ ಬೆಂಬಲ ನೀಡಿದರೂ ಸಹ ಹೈಕಮಾಂಡ್ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬಹುದು ಎಂಬುದು ಲೆಕ್ಕಾಚಾರವಾಗಿದೆ.
ಮುಖ್ಯಮಂತ್ರಿ ಹುದ್ದೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ವಿಶ್ವಜಿತ್ ರಾಣೆ, "ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷ ಸೂಚಿಸಿದಂತೆ ನಡೆದುಕೊಳ್ಳುತ್ತೇನೆ" ಎಂದರು.
2019ರಲ್ಲಿ ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿದ್ದರು. ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿದ್ದು, ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಪಕ್ಷದ ಹೈಕಮಾಂಡ್ ನಾಯಕರ ಜೊತೆಗೂ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಗೋವಾದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಮನೋಹರ್ ಪರಿಕ್ಕರ್. ಆದರೆ ಚುನಾವಣೆಯಲ್ಲಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಮನೋಹರ್ ಪರಿಕ್ಕರ್ ನಿಧನದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು.
ಪರಿಕ್ಕರ್ ಇಲ್ಲದಿದ್ದರೂ ಬಿಜೆಪಿಗೆ ಜನರು ಬೆಂಬಲ ನೀಡಿದ್ದಾರೆ. ಅಂದರೆ ಪ್ರಮೋದ್ ಸಾವಂತ್ ಮಾಡಿದಂತಹ ಕೆಲಸಗಳು ಅವರಿಗೆ ಇಷ್ಟವಾಗಿವೆ ಎಂದೇ ಅರ್ಥ. ಇಂತಹ ಸಮಯದಲ್ಲಿ ಸಾವಂತ್ ಬದಲು ಬೇರೆಯವರನ್ನು ಸಿಎಂ ಮಾಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.