ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಿಹಾರ ಕಾರ್ಮಿಕರಿಗೆ ಬಂಪರ್!
ಪಾಟ್ನಾ, ಅಕ್ಟೋಬರ್.21: ಬಿಹಾರದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗವನ್ನು ಸೃಷ್ಟಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ. ಮಹಾಘಟಬಂಧನ್ ಮೈತ್ರಿಕೂಟವು ಬಿಹಾರ ವಿಧಾನಸಭಾ ಚುನಾವಣೆ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆಗೊಳಿಸಿದೆ.
ರಾಜ್ಯದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂಪಾಯಿ ಸಹಾಯ ಧನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಪಂಜಾಬ್ ಸರ್ಕಾರದ ಮಾದರಿಯಲ್ಲೇ ಬಿಹಾರದಲ್ಲೂ ಪ್ರತ್ಯೇಕವಾಗಿ ರೈತ ಕಾನೂನು ತಿದ್ದುಪಡಿ ಮಾಡಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ.
ಬಿಹಾರ ಚುನಾವಣಾ ಸಮೀಕ್ಷೆ; ನಿತೀಶ್ಗೆ ಮತ್ತೊಂದು ಅವಕಾಶ ಬೇಕೆ?
ಬಿಹಾರದಲ್ಲಿ ಪ್ರತಿ ತಿಂಗಳು 800 ರೂಪಾಯಿ ವೃದ್ಧಾಪ್ಯ ವೇತನ ಮತ್ತು ವಿಧವಾ ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪ್ರತಿ ತಿಂಗಳು 1000 ರೂಪಾಯಿ ಸಹಾಯ ಧನವನ್ನು ನೀಡಲಾಗುತ್ತದೆ. ರೈತರ ಕೃಷಿಗೆ ನೆರವಾಗುವಂತೆ ಉಚಿತವಾಗಿ ವಿದ್ಯುತ್ ಒದಗಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಬಿಹಾರದ ರೈತರಿಗೆ ಸಾಲಮನ್ನಾ ಬಗ್ಗೆ ಭರವಸೆ:
ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಸರ್ಕಾರವು ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲಮನ್ನಾ ಮಾಡಲಾಗುತ್ತದೆ. ಕೃಷಿಗೆ ಅಗತ್ಯವಿರುವ ಪ್ರಮಾಣದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಲಾಗುತ್ತದೆ. ಎನ್ ಡಿಎ ಮೈತ್ರಿಕೂಟದ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಬಿಹಾರದಲ್ಲಿ ರದ್ದುಗೊಳಿಸಲಾಗುತ್ತದೆ. ಪಂಜಾಬ್ ಮಾದರಿಯಲ್ಲಿ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಶಕ್ತಿಸಿನ್ಹಾ ಗೋಹಿಲ್ ತಿಳಿಸಿದರು.
ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಮಹಾಘಟಬಂಧನ್ ಮೈತ್ರಿಕೂಟವು ಹೊರಟಿದ್ದು, ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ 70 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಪೈಕಿ 39 ಅಭ್ಯರ್ಥಿಗಳು 50 ವರ್ಷಕ್ಕಿಂತ ಚಿಕ್ಕವರೇ ಆಗಿದ್ದು, ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೆಚ್ಚಾಗಿ ಮಣೆ ಹಾಕಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.