ಬಿಹಾರ ಚುನಾವಣೆ; ವಿಪಕ್ಷಗಳು ಖಾಲಿ ಕೈಯಲ್ಲಿ ಕೂತಿವೆ
ಪಾಟ್ನಾ, ಅಕ್ಟೋಬರ್ 14 : " ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಪ್ರಸ್ತಾಪಿಸಲು ಯಾವುದೇ ವಿಷಯಗಳು ಇಲ್ಲ. ಅವುಗಳು ಖಾಲಿ ಕೈಯಲ್ಲಿ ಕುಳಿತಿವೆ" ಎಂದು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಲೇವಡಿ ಮಾಡಿದರು.
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಸುಶೀಲ್ ಮೋದಿ, "ವಿರೋಧ ಪಕ್ಷಗಳು ಕೋವಿಡ್ 19 ಪರಿಸ್ಥಿತಿ ಬಗ್ಗೆ ಮಾತನಾಡುತ್ತಿವೆ. ಆದರೆ, ರಾಜ್ಯದಲ್ಲಿ ಸೋಂಕು ನಿಯಂತ್ರಣದಲ್ಲಿದೆ" ಎಂದರು.
"ರಾಜ್ಯದಲ್ಲಿ 961 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 41,000 ಸಾವಿನ ಪ್ರಕರಣಗಳು ದಾಖಲಾಗಿವೆ. ಬಿಹಾರದಲ್ಲಿ ಪ್ರತಿದಿನ ಸುಮಾರು 1 ಲಕ್ಷ ಜನರನ್ನು ಪರೀಕ್ಷೆ ಮಾಡಲಾಗುತ್ತಿದೆ. ಹಾಸಿಗೆಗಳು ಸಹ ಲಭ್ಯವಿದೆ" ಎಂದು ಸುಶೀಲ್ ಮೋದಿ ಹೇಳಿದರು.

ಬಿಹಾರ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಪಾಟ್ನಾ ಸೇರಿದಂತೆ 5 ಜಿಲ್ಲೆಗಳಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ, ಮತಯಾಚನೆ ಮಾಡಿದರು.
ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ವಿಧಾನಸಭೆ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲಿಯೇ 10 ಲಕ್ಷ ಯುವಕರಿಗೆ ಉದ್ಯೋಗವನ್ನು ನೀಡಲಾಗುತ್ತದೆ. ಇದು ಸರ್ಕಾರಿ ಉದ್ಯೋಗವಾಗಿದ್ದು, ಗುತ್ತಿಗೆ ಆಧಾರದ ನೇಮಕಾತಿಯಲ್ಲ" ಎಂದು ಭರವಸೆ ನೀಡಿದ್ದಾರೆ.
ಈಗಾಗಲೇ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದೆ. ಬಿಜೆಪಿ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಆಯ್ಕೆಯನ್ನು ಸಹ ತೆರೆದಿಟ್ಟಿದೆ.
ಆರ್ಜೆಡಿ ಮಹಾಘಟಬಂಧನ್ ಮುನ್ನಡೆಸುತ್ತಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಇದರಲ್ಲಿ ಸೇರಿಕೊಂಡಿದ್ದು, ಸೀಟು ಹಂಚಿಕೆ ಮಾಡಿಕೊಂಡಿವೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು ಎನ್ಡಿಎ ಮೈತ್ರಿಕೂಟದಲ್ಲಿದೆ. ಬಿಜೆಪಿ ಮತ್ತು ಜೆಡಿಯು ಸೀಟು ಹಂಚಿಕೆಯಾಗಿದೆ.
ಒಟ್ಟು 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮತದಾನ ನಡೆಯಲಿದ್ದು, ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಲಾಕ್ ಡೌನ್ ಅವಧಿಯಲ್ಲಿ ದೇಶದ ಬೇರೆ-ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರು ಬಿಹಾರಕ್ಕೆ ವಾಪಸ್ ಆಗಿದ್ದಾರೆ. ಅವರಿಗೆ ಉದ್ಯೋಗ ದೊರಕಿಸಿಕೊಡುವುದು ವಿಧಾನಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ.
ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವಸೇನೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 40-45 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ರಾಜ್ಯದ ಹಲವು ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗಾಗಿ ಮಾತುಕತೆಯೂ ನಡೆಯುತ್ತಿದೆ.











Click it and Unblock the Notifications