Breaking: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ
ಪಾಟ್ನಾ, ಆಗಸ್ಟ್ 09: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸ್ವಲ್ಪ ಸಮಯದ ಹಿಂದೆಯಷ್ಟೇ ಪಾಟ್ನಾದ ರಾಜಭವನಕ್ಕೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅವರೊಂದಿಗೆ ತಲುಪಿದ್ದರು.
ಇನ್ನು, ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ಅವರು "ಹೊಸ ರೂಪದಲ್ಲಿ ಹೊಸ ಒಕ್ಕೂಟದ ನಾಯಕತ್ವವನ್ನು ವಹಿಸಿಕೊಂಡಿದ್ದಕ್ಕಾಗಿ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ನಿತೀಶ್ ಜಿ ಮುಂದೆ ಸಾಗಿ. ದೇಶವು ನಿಮಗಾಗಿ ಕಾಯುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲು 160 ಶಾಸಕರ ಬೆಂಬಲ ಪತ್ರವನ್ನೂ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. "ನಾವು ಎನ್ಡಿಎ ತೊರೆಯಬೇಕು ಎಂದು ಎಲ್ಲಾ ಸಂಸದರು ಮತ್ತು ಶಾಸಕರು ಒಮ್ಮತದಿಮದ ಹೇಳಿದ್ದಾರೆ" ಎಂದು ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಂತರ ತಿಳಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತಮಗೆ 160 ಶಾಸಕರ ಬೆಂಬಲವಿದೆ ಎಂದು ಘೋಷಿಸಿದ್ದಾರೆ.
ನಿತೀಶ್ ಕುಮಾರ್ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಲ್ಜೆಪಿ (ರಾಮ್ ವಿಲಾಸ್ ಬಣ) ನಾಯಕ ಚಿರಾಗ್ ಪಾಸ್ವಾನ್, 'ನಿತೀಶ್ ಕುಮಾರ್ ಅವರ ವಿಶ್ವಾಸಾರ್ಹತೆ ಶೂನ್ಯವಾಗಿದೆ. ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಬೇಕು' ಎಂದು ಆಗ್ರಹಿಸಿದ್ದಾರೆ.
ಜೊತೆಗೆ 'ನಿತೀಶ್ ಕುಮಾರ್ ನೀವು ಯಾವುದೇ ಸಿದ್ಧಾಂತವನ್ನು ಹೊಂದಿದ್ದೀರಾ ಅಥವಾ ಇಲ್ಲವೇ? ಮುಂದಿನ ಚುನಾವಣೆಯಲ್ಲಿ ಜೆಡಿಯು 0 ಸ್ಥಾನಗಳನ್ನು ಪಡೆಯಲಿದೆ' ಎಂದು ಚಿರಾಗ್ ಭವಿಷ್ಯ ನುಡಿದಿದ್ದಾರೆ.












Click it and Unblock the Notifications