ಬಿಹಾರಿಗಳ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು
ಪಾಟ್ನಾ, ಏಪ್ರಿಲ್ 1: ಬಿಹಾರಿಗಳ ಕುರಿತು ಈಚೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಸಮಾವೇಶದಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ಮಾತನಾಡುತ್ತಾ, "ಪಶ್ಚಿಮ ಬಂಗಾಳಕ್ಕೆ ಬಿಹಾರದಿಂದ ಗೂಂಡಾಗಳನ್ನು ಕರೆಸಲಾಗಿದೆ. ಮತದಾರರನ್ನು ಬೆದರಿಸಲು ಬಿಹಾರ ಹಾಗೂ ಉತ್ತರ ಪ್ರದೇಶದ ಗೂಂಡಾಗಳು ನಂದಿಗ್ರಾಮಕ್ಕೆ ಬಂದು ನೆಲೆಯೂರಿದ್ದಾರೆ. ಬಲರಾಂಪುರ ಹಾಗೂ ಇತರ ಗ್ರಾಮಸ್ಥರನ್ನು ಬೆದರಿಸುತ್ತಿದ್ದಾರೆ" ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.
ಈ ಕುರಿತು ಚುನಾವಣಾ ಆಯೋಗ ಕ್ರಮ ವಹಿಸಬೇಕು ಎಂದು ಕೇಳಿಕೊಂಡಿದ್ದರು. ಈ ಹೇಳಿಕೆಗೆ ವಿರುದ್ಧವಾಗಿ ಮಮತಾ ಬ್ಯಾನರ್ಜಿ ವಿರುದ್ಧ ಬಿಹಾರದ ಮುಜಪ್ಪರಪುರ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ದೂರು ನೀಡಿದ್ದಾರೆ. ಮಮತಾ ಬ್ಯಾನರ್ಜಿ ಬಿಹಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 8ರಂದು ಈ ಕುರಿತು ವಿಚಾರಣೆ ನಡೆಯುವುದಾಗಿ ತಿಳಿದುಬಂದಿದೆ.












Click it and Unblock the Notifications