ಕಾಂಗ್ರೆಸ್ ಸೋಲಿನ ಕಥೆ: ಬಿಹಾರದಲ್ಲಿ ರಾಷ್ಟ್ರೀಯ ಪಕ್ಷ ಮಾಡಿದ ತಪ್ಪೇನು?
ಪಾಟ್ನಾ, ನವೆಂಬರ್.19: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬುದನ್ನು ಕಾಂಗ್ರೆಸ್ ಕಂಡುಕೊಂಡಿದೆ. ಮಹಾಘಟಬಂಧನ್ ಮೈತ್ರಿಕೂಟದ ಒಪ್ಪಂದದ ಸಂದರ್ಭದಲ್ಲಿ ಕಾಂಗ್ರೆಸ್ ಕ್ಷೇತ್ರಗಳ ಆಯ್ಕೆಯಲ್ಲಿ ಎಡವಿತ್ತು ಪಕ್ಷದ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದರು.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತುಕೊಂಡ ಅಖಿಲೇಶ್ ಪ್ರಸಾದ್ ಸಿಂಗ್ ಅವರು ಹೈಕಮಾಂಡ್ ಜೊತೆಗೆ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಆಯ್ದುಕೊಂಡ ಕ್ಷೇತ್ರಗಳೇ ತಪ್ಪಾಗಿದ್ದವು. ಈ ಕುರಿತು ಸುದೀರ್ಘ ವಿಶ್ಲೇಷಣೆ ನಡೆಸಬೇಕಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬಿಹಾರ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ರಾಜೀನಾಮೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನು ಹೊತ್ತುಕೊಳ್ಳುವುದಕ್ಕೆ ನಾನು ಬದ್ಧನಾಗಿದ್ದೇನೆ. ರಾಹುಲ್ ಗಾಂಧಿ ಅವರಿಗೆ ಈ ಕುರಿತು ಪ್ರಶ್ನೆ ಮಾಡಲಿದ್ದು, ಕೆಳಮಟ್ಟದಿಂದ ಪಕ್ಷದ ಸಂಘಟನೆ ಮಾಡುವುದು ಹೇಗೆ ಎನ್ನುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಅಖಿಲೇಶ್ ಪ್ರಸಾದ್ ಸಿಂಗ್ ಹೇಳಿದ್ದಾರೆ.
ಬಿಹಾರ ಚುನಾವಣೆಯಿಂದ ಕಾಂಗ್ರೆಸ್ಸಿಗೆ ಪಾಠ
ದೇಶದಲ್ಲಿ ಇನ್ನು ಮುಂದೆ ಯಾವುದೇ ರಾಜ್ಯದ ಚುನಾವಣೆಗಳಲ್ಲಿ ಸ್ಪರ್ಧಿಸಬೇಕಾದರೂ ಕೂಡಾ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾದ ಅಗತ್ಯತೆಯಿದೆ. ಜಿಲ್ಲಾ ಮತ್ತು ಬ್ಲಾಕ್ ಹಂತದಲ್ಲಿನ ವೈಫಲ್ಯವನ್ನು ಸರಿಪಡಿಸುವ ಕಾರ್ಯವನ್ನು ಮಾಡಬೇಕಿದೆ. ಬಿಹಾರ ವಿಧಾನಸಭಾ ಚುನಾವಣೆ ಸೋಲಿನಿಂದಾಗಿ ಕಾಂಗ್ರೆಸ್ ಬಹುದೊಡ್ಡ ಪಾಠವನ್ನು ಕಲಿತುಕೊಂಡಿದೆ ಎಂದು ಅಖಿಲೇಶ್ ಪ್ರಸಾದ್ ಸಿಂಗ್ ತಿಳಿಸಿದ್ದಾರೆ.
ಸಂಘಟನೆ ವೈಫಲ್ಯವನ್ನು ಪ್ರಶ್ನಿಸಿದ್ದ ಚಿದಂಬರಂ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಘಟಿತ ಮತ್ತು ಸಾಂಸ್ಥಿಕ ಹೋರಾಟ ನಡೆಸಲಿಲ್ಲ ಎಂದು ಕೇಂದ್ರ ಮಾಜಿ ಸಚಿವ ಪಿ.ಚದಂಬರಂ ಆರೋಪಿಸಿದ್ದರು. ದೈನಿಕ್ ಭಾಸ್ಕರ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಮತ್ತಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್ ಸ್ಪರ್ಧಿಸಬೇಕಿತ್ತು ಎಂದು ಹೇಳಿದ್ದರು. "ನನಗೆ ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಗಳ ಫಲಿತಾಂಶದ ಬಗ್ಗೆ ಸಾಕಷ್ಟು ಆತಂಕವಾಗುತ್ತಿದೆ. ಕಾಂಗ್ರೆಸ್ ಪಕ್ಷವು ಸಂಘಟಿತ ಪ್ರದರ್ಶನ ನೀಡುವಲ್ಲಿ ಮತ್ತು ಕೆಳಮಟ್ಟದಿಂದ ಸಂಘಟಿತ ಹೋರಾಟ ತೋರುವಲ್ಲಿ ವಿಫಲವಾಗಿರುವುದು ಫಲಿತಾಂಶದಿಂದ ತಿಳಿದು ಬರುತ್ತದೆ ಎಂದು ಪಿ.ಚಿದಂಬರಂ ಹೇಳಿದ್ದರು.
ಬಿಹಾರದ 45 ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕಿತ್ತು ಕಾಂಗ್ರೆಸ್
2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಚುನಾವಣಾಪೂರ್ವದಲ್ಲಿ ಮಾಡಿಕೊಂಡ ಒಪ್ಪಂದವೇ ಕಾರಣ ಎಂದು ಪಿ.ಚಿದಂಬರಂ ಆರೋಪಿಸಿದ್ದಾರೆ. ಬಿಹಾರದಲ್ಲಿ ಮತ್ತಷ್ಟು ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸಬೇಕಿತ್ತು. ಆದರೆ ಬಿಜೆಪಿಯು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದು, ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾಯಿತು. 20 ವರ್ಷಗಳಿಂದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾ ಬಂದಿರುವ 25 ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ನೀಡಲಾಗಿತ್ತು. ಈ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕೆ ಮೊದಲೇ ನಿರಾಕರಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ವೈಫಲ್ಯತೆಯನ್ನು ಟೀಕಿಸಿದ್ದ ಕಪಿಲ್ ಸಿಬಲ್
ಬಿಹಾರದ ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಅನ್ನು "ಪರಿಣಾಮಕಾರಿ ಪರ್ಯಾಯ" ಎಂದು ಪರಿಗಣಿಸುವುದಿಲ್ಲ. ಪಕ್ಷವು ಸಂಘಟಿತ ಹೋರಾಟವನ್ನು ಪ್ರದರ್ಶಿಸುವಲ್ಲಿ ಹಿನ್ನಡೆ ಅನುಭವಿಸಿರುವುದೇ ಪಕ್ಷದ ಸೋಲಿಗೆ ಕಾರಣ ಎಂದು ಹಿರಿಯ ಮುಖಂಡ ಕಪಿಲ್ ಸಿಬಲ್ ಆರೋಪಿಸಿದ್ದರು.