ಪೆಗಾಗಸ್ ಬೇಹುಗಾರಿಕೆ: NDA ವಿರುದ್ಧವೇ ಧ್ವನಿ ಎತ್ತಿದ ಜಿತನ್ ರಾಮ್ ಮಾಂಝಿ!
ನವದೆಹಲಿ, ಆಗಸ್ಟ್ 3: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ಪ್ರಕರಣದ ವಿರುದ್ಧ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮತ್ತೊಬ್ಬ ಹಿರಿಯ ನಾಯಕ ಹಾಗೂ ಹಿಂದೂಸ್ತಾನಿ ಅವಂ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಧ್ವನಿ ಎತ್ತಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಪ್ರತಿಪಕ್ಷಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. "ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳ ನಾಯಕರು ಬೇಹುಗಾರಿಕೆ ನಡೆದಿರುವ ಬಗ್ಗೆ ಆರೋಪಿಸುತ್ತಿದ್ದಾರೆ ಎಂದಾದರೆ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪೆಗಾಸಸ್ ಬೇಹುಗಾರಿಕೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಆ ಮೂಲಕ ಪ್ರಕರಣದ ಹಿಂದಿರುವ ವ್ಯಕ್ತಿ ಯಾರು ಬೇಹುಗಾರಿಕೆ ನಡೆಸುತ್ತಿರುವುದು ಯಾರು ಎನ್ನುವುದು ಬಹಿರಂಗವಾಗಬೇಕು," ಎಂದಿದ್ದಾರೆ.
ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹ
ಬಿಹಾರ ಸರ್ಕಾರದಲ್ಲಿ ಎನ್ ಡಿಎ ಮೈತ್ರಿ ಸರ್ಕಾರದ ಭಾಗವಾಗಿರುವ ಜಿತನ್ ರಾಮ್ ಮಾಂಝಿ ಈ ಹಿಂದಯೂ ಕೂಡ ಹಲವು ವಿಷಯಗಳಿಗೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಯನ್ನು ವಿರೋಧಿಸಿದ್ದರು. ಕೊರೊನಾವೈರಸ್ ಲಸಿಕೆ ವಿತರಣೆಯ ಪ್ರಮಾಣಪತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರ ಬಳಸುತ್ತಿರುವುದಕ್ಕೆ ಮಾಂಝಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಕೊವಿಡ್-19 ಸೋಂಕಿನಿಂದ ಮೃತಪಟ್ಟವರ ಮರಣ ಪ್ರಮಾಣಪತ್ರದಲ್ಲೂ ಮೋದಿ ಭಾವಚಿತ್ರವನ್ನು ಹಾಕುವುದಕ್ಕೆ ವಿರೋಧಿಸಿದ್ದರು.
ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಬಿಹಾರ ಸಿಎಂ ಆಗ್ರಹ:
ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದರು. ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸ್ವತಃ ಸಿಎಂ ಆಗ್ರಹಿಸಿದ್ದರು. ದೂರವಾಣಿ ಕದ್ದಾಲಿಕೆಯ ಬಗ್ಗೆ ಬಹಳ ದಿನಗಳಿಂದ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಚರ್ಚೆ ನಡೆಯಲೇಬೇಕು. ಆರಂಭದ ದಿನದಿಂದಲೇ ನಾನು ಇದನ್ನು ಹೇಳುತ್ತಿದ್ದೇನೆ. ಆದರೆ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಸರ್ಕಾರ, ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದೆ. ಆದರೆ ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಯಲೇಬೇಕು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
300ಕ್ಕೂ ಹೆಚ್ಚು ಜನರ ವಿರುದ್ಧ ಬೇಹುಗಾರಿಕೆ ತಂತ್ರ:
ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ ಎಂದ ಆರೋಪವಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.
ಪೆಗಾಸಸ್ ಗೂಢಾಚಾರಿಕೆ ಬಗ್ಗೆ ತನಿಖೆ ವರದಿ ಪ್ರಕಟ
ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ವಿರೋಧ ಪಕ್ಷಗಳ ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ:
ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದ್ದರು. ಅಲ್ಲದೇ, "ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದರು.