ಸಚಿವ ಈಶ್ವರಪ್ಪ ದೇಶದ್ರೋಹಿ ಎಂದ ಉಪೇಂದ್ರ ಕುಶ್ವಾಹ
ಪಾಟ್ನಾ, ಫೆಬ್ರವರಿ 12: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಡಲೂ ಬಹುದು ಎಂಬ ಕೆಎಸ್ ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಂತ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಭವಿಷ್ಯದಲ್ಲಿ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲೂಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ದೇಶದ್ರೋಹಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ, ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರು ಶುಕ್ರವಾರ ಕಿಡಿಕಾರಿದ್ದಾರೆ.
"ಮೊದಲ ಸಾಮ್ರಾಟ್ ಅಶೋಕ್ ಅವರನ್ನು ಅವಮಾನಿಸಲಾಯಿತು. ಬಿಜೆಪಿ ಈಗ ತ್ರಿವರ್ಣ ಧ್ವಜದ ವಿರುದ್ಧ ಅಭಿಯಾನ ನಡೆಸುವಂತಿದೆ. ಭಾರತ ಇದನ್ನು ಹೇಗೆ ಸಹಿಸಿಕೊಳ್ಳುತ್ತದೆ?" ಎಂದು ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ಅವರು ಮಿತ್ರ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿ ಸಚಿವ ಈಶ್ವರಪ್ಪ ಅವರ ವಿರುದ್ಧ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಕುಶ್ವಾಹ ಒತ್ತಾಯಿಸಿದ್ದಾರೆ. ಅಲ್ಲದೆ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ.
ಭವಿಷ್ಯದಲ್ಲಿ ಅಂದರೆ 100 ಅಥವಾ 200 ಅಥವಾ 500 ವರ್ಷಗಳ ನಂತರ ಭಗವದ್ ಧ್ವಜ ರಾಷ್ಟ್ರ ಧ್ವಜವಾಗಬಹುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇನ್ನು ಕೇಂದ್ರ ಸಚಿವ ನಾರಾಯಣ ಸ್ವಾಮಿ ಕೂಡ ಈ ಕುರಿತು ಮಾತನಾಡಿದ್ದು, ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಒಂದಲ್ಲ ಒಂದು ದಿನ ಹಾರಿಸುವುದು ಕೆ.ಎಸ್ ಈಶ್ವರಪ್ಪ ಕನಸು. ಅವರ ಕನಸನ್ನು ನಾನು ಹೇಗೆ ಒಪ್ಪಲಿ? ಎಂದು ಪ್ರಶ್ನಿಸಿದರು.
ಬೆಂಗಳೂರು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರ ಧ್ವಜಕ್ಕೆ ಗೌರವ ಕೊಡುತ್ತೇನೆ ಎಂದರು. ಹಿಜಾಬ್ ವಿವಾದವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನ್ಯಾಯಾಲಯದ ಆದೇಶ ಪಾಲಿಸುತ್ತೇನೆ ಎಂದರು.
ಹಿಜಾಬ್/ ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಸೋಮವಾರದಿಂದ ಹೈಸ್ಕೂಲ್ಗಳು ಆರಂಭವಾಗಲಿವೆ. ಆದರೆ ಕಾಲೇಜುಗಳಿಗೆ ನೀಡಿದ ರಜೆಯನ್ನು ಫೆಬ್ರವರಿ 14ರ ತನಕ ವಿಸ್ತರಣೆ ಮಾಡಲಾಗಿದೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದು, ರಜೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. "ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ" ಎಂದು ತಿಳಿಸಿದ್ದಾರೆ.
ಶುಕ್ರವಾರ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಇದೇ ಸಮ ಸಂಖ್ಯೆಯ ದಿನಾಂಕ 8/2/2022ರ ಸುತ್ತೋಲೆಯನ್ನು ಮುಂದುವರೆಸುತ್ತಾ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications