Breaking: ರಾಜೀನಾಮೆ ಬಳಿಕ ನಿತೀಶ್ ಕುಮಾರ್ ಮೊದಲ ಪ್ರತಿಕ್ರಿಯೆ
ಪಾಟ್ನಾ, ಆಗಸ್ಟ್, 09: ಬಿಹಾರದ ರಾಜಕೀಯದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್, ಎನ್ಡಿಎ ಮೈತ್ರಿಕೂಟದಿಂದ ಹೊರ ನಡೆಯುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ, ರಾಜೀನಾಮೆ ಪತ್ರ ಸಲ್ಲಿಸಿದ ನಿತೀಶ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ರಾಜ್ಯದಲ್ಲಿರುವ ಜೆಡಿಯು ಪಕ್ಷದ ಎಲ್ಲಾ ಸಂಸದರು ಮತ್ತು ಶಾಸಕರು ಎನ್ಡಿಎ ಮೈತ್ರಿಕೂಟದಿಂದ ಹೊರ ನಡೆಯುವುದಕ್ಕೆ ಒಮ್ಮತ ಸೂಚಿಸಿದ್ದಾರೆ" ಎಂದು ನಿತೀಶ್ ಕುಮಾರ್ ಹೇಳಿದರು.
ರಾಜಭವನದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ ನಿತೀಶ್ ಕುಮಾರ್ ನೇರವಾಗಿ ಅಲ್ಲಿಂದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ ನಿವಾಸಕ್ಕೆ ತೆರಳಿದ್ದಾರೆ. ಇಲ್ಲಿಂದ ಮುಂದಿನ ರಾಜಕೀಯ ಬೆಳವಣಿಗೆಗಳು ಸಾಕಷ್ಟು ಕುತೂಹಲ ಕೆರಳಿಸಿದೆ. ಸಂಜೆ 5 ಗಂಟೆ ಸುಮಾರಿಗೆ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ-ಜೆಡಿಯು ತಿಕ್ಕಾಟ ರಾಜೀನಾಮೆಯಲ್ಲಿ ಅಂತ್ಯ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ತಿಕ್ಕಾಟ ರಾಜಕೀಯ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಮಂಗಳವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆಯಿಂದ ಅದು ಒಂದು ತಾರ್ಕಿಕ ಅಂತ್ಯಕ್ಕೆ ಬಂದು ತಲುಪಿದೆ. ಇನ್ನು ಮುಂದಿನ ರಾಜಕೀಯ ಬೇಲಾಟಗಳ ಮೇಲೆ ರಾಜ್ಯದ ಸರ್ಕಾರದ ಮತ್ತು ಅಧಿಕಾರದ ಹಣೆಬರಹ ನಿರ್ಧಾರವಾಗಲಿದೆ.