ಬಿಹಾರದ 37ನೇ ಸಿಎಂ ನಿತೀಶ್ ಕುಮಾರ್ರಿಗೆ ಶುಭಾಶಯದ ಮಹಾಪೂರ
ಪಾಟ್ನಾ, ನವೆಂಬರ್.16: ಬಿಹಾರದ 37ನೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಶುಭಾಷಯಗಳ ಮಹಾಪೂರವೇ ಹರಿದು ಬಂದಿದೆ. ನಾಲ್ಕನೇ ಅವಧಿಗೆ ಆಯ್ಕೆ ಆಗಿರುವ ಧೀಮಂತ ನಾಯಕನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆದಿಯಾಗಿ ಹಲವು ನಾಯಕರು ಶುಭ ಕೋರಿದ್ದಾರೆ.
ಪಾಟ್ನಾದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ 69 ವರ್ಷದ ನಿತೀಶ್ ಕುಮಾರ್ ಏಳನೇ ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಿದರು. ರಾಜ್ಯಪಾಲ ಫಾಗು ಚೌವ್ಹಾಣ್ ನೂತನ ಮುಖ್ಯಮಂತ್ರಿಗೆ ಪ್ರಮಾಣವಚನ ಬೋಧಿಸಿದರು.
ಭಾನುವಾರ ಎನ್ ಡಿಎ ಮೈತ್ರಿಕೂಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ನಿತೀಶ್ ಕುಮಾರ್ ಸಿಎಂ ಕುರ್ಚಿಗೆ ಏರಿದರು. ಸುಶೀಲ್ ಮೋದಿ ಬದಲಿಗೆ ಬಿಜೆಪಿಯ ಇಬ್ಬರು ಶಾಸಕರು ಉಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೊಸ ಸರ್ಕಾರಕ್ಕೆ ಯಾವೆಲ್ಲ ನಾಯಕರು ಶುಭಾಷಯ ಕೋರಿದ್ದಾರೆ ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ನೂತನ ಸಿಎಂ ನಿತೀಶ್ ರಿಗೆ ಪ್ರಧಾನಿ ಶುಭಾಷಯ
ಬಿಹಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಹಾಗೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ. ಬಿಹಾರದ ಅಭಿವೃದ್ಧಿಗಾಗಿ ಎನ್ ಡಿಎ ಮೈತ್ರಿಕೂಟವು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದೆ. ರಾಜ್ಯಕ್ಕೆ ಅಗತ್ಯ ನೆರವನ್ನು ಕೇಂದ್ರದಿಂದಲೂ ಒದಗಿಸಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮಾರ್ಗದರ್ಶನದಡಿ ಅಭಿವೃದ್ಧಿ ಪರ ಆಡಳಿತ
ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಅಧಿಕಾರದ ಚುಕ್ಕಾಣಿ ಹಿಡಿದ ನಿತೀಶ್ ಕುಮಾರ್ ಆದಿಯಾಗಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಶುಭಾಷಯ ಕೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮಾರ್ಗದರ್ಶನದಡಿ ನೂತನ ಸರ್ಕಾರವು ರೈತಪರ, ಮಹಿಳೆಯರು ಮತ್ತು ಯುವ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತದೆ. ಜನರಿಗೆ ನೀಡಿದ್ದ ಆಶೋತ್ತರಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುತ್ತದೆ ಎಂದು ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಎನ್ ಡಿಎ ಸರ್ಕಾರ ಆಯ್ಕೆ ಕುರಿತು ಸಂತಸ
ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನಿಂದ ತುಂಬಾ ಸಂತೋಷವಾಗಿದೆ. ಮುಂದಿನ 5 ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿಗೆ ಮೈತ್ರಿ ಸರ್ಕಾರವು ಶ್ರಮಿಸಲಿದೆ ಎಂದು ಬಿಹಾರ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ನಿತೀಶ್ ಕುಮಾರ್ ರಿಗೆ ಕುರ್ಚಿ ಗಿಟ್ಟಿಸಿದ ಫಲಿತಾಂಶ
243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಎನ್ ಡಿಎ 125 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದಿದ್ದು, ಬಿಹಾರದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಲಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.












Click it and Unblock the Notifications