ಬಿಹಾರದ ಮುಂದಿನ ಸಿಎಂಗೆ ಧರ್ಮಗುರು ದಲೈಲಾಮಾ ಪತ್ರ!
ಪಾಟ್ನಾ, ನವೆಂಬರ್.11: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ. ದೀಪಾವಳಿ ನಂತರದಲ್ಲಿ ರಾಜ್ಯದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಪದಗ್ರಹಣಕ್ಕೂ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ.
ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅಣಿಯಾಗುತ್ತಿರುವ ನಿತೀಶ್ ಕುಮಾರ್ ಅವರಿಗೆ ಧಾರ್ಮಿಕ ಗುರು ದಲೈಲಾಮಾ ಶುಭಾಷಯ ಕೋರಿ ಪತ್ರ ಬರೆದಿದ್ದಾರೆ. ಮುಂದಿನ ನಿಮ್ಮ ಹಾದಿ ಸುಗಮವಾಗಿರಲಿ ಎಂದು ಆಶೀರ್ವದಿಸಿದ್ದಾರೆ.
ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ
"ಬಿಹಾರದ ಜನರ ಆಶಯಗಳನ್ನು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ. ಮುಂದೆ ಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ನೀವು ಯಶಸ್ವಿಯಾಗುತ್ತೀರಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ದಲೈಲಾಮಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ:
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.
Recommended Video