ಬಿಹಾರ: ಮೊದಲ ಪ್ರಚಾರದಲ್ಲಿ ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ
ಪಾಟ್ನಾ, ಅಕ್ಟೋಬರ್.12: ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ. 15 ವರ್ಷಗಳ ಆಡಳಿತವನ್ನು ನೋಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಜೊತೆಗೆ ಮೈತ್ರಿಕೂಟ ರಚನೆ ಬಳಿಕ ಮೊದಲ ಬಾರಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ ಜನರು ಈ ಹಿಂದೆ ಕುಟುಂಬ ರಾಜಕಾರಣದಿಂದ ಬೇಸತ್ತು ಹೋಗಿದ್ದರು. ಕಳೆದ 15 ವರ್ಷಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗಿದೆ ಎಂದರು.
ನವೆಂಬರ್.28ರಂದು ಬಂಕಾ ಮತ್ತು ಮುಂಗುರ್ ಜಿಲ್ಲೆಯ 12 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲೇ ಮತದಾನ ನಡೆಯಲಿದೆ. ಈ ಎಲ್ಲ ಕ್ಷೇತ್ರಗಳಲ್ಲೂ ಸಿಎಂ ನಿತೀಶ್ ಕುಮಾರ್ ಚುನಾವಣಾ ಪ್ರಚಾರಗಳನ್ನು ಮುಂಬರುವ ದಿನಗಳಲ್ಲಿ ನಡೆಯಲಿದ್ದಾರೆ.

15 ವರ್ಷಗಳಲ್ಲಿನ ಬದಲಾವಣೆ ಬಗ್ಗೆ ಉಲ್ಲೇಖ
ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಸಿಎಂ ನಿತೀಶ್ ಕುಮಾರ್ ತಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. "ಕಳೆದ 2005ರಲ್ಲಿ ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭಗಳಲ್ಲಿ ಪರಿಸ್ಥಿತಿ ಹೇಗಿತ್ತು. 2020ರಲ್ಲಿ ಇಂದು ರಾಜ್ಯದಲ್ಲಿ ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ ಸೇರಿದಂತೆ ನಿಮ್ಮ ನಿಮ್ಮ ಮನೆಗಳಲ್ಲಿನ ಆರ್ಥಿಕ ಪರಿಸ್ಥಿತಿ ಹೇಗೆ ತೀವ್ರಗತಿಯಲ್ಲಿ ಬದಲಾವಣೆ ಹೊಂದಿದೆ ಎಂಬುದನ್ನು ಆತ್ಮಪರಿಶೋಧನೆ ಮಾಡಿಕೊಳ್ಳಬೇಕು. ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು" ಎಂದು ಸಿಎಂ ನಿತೀಶ್ ಕುಮಾರ್ ಹೇಳಿದರು.

ಬಿಹಾರದ ರೈತರಿಗೆ ನೀರಾವರಿ ವ್ಯವಸ್ಥೆ
ಬಿಹಾರದಲ್ಲಿ ಎರಡನೇ ಹಂತದ ಅಭಿವೃದ್ಧಿ ಕಾರ್ಯಗಳು ಮತ್ತು ಆರಂಭವಾಗಬೇಕಿದ್ದಲ್ಲಿ ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡಬೇಕು. ನಾನು ಇನ್ನೊಂದು ಅವಧಿಗೆ ಅಧಿಕಾರಕ್ಕೆ ಬಂದರೆ ರಾಜ್ಯದ ರೈತರು ಮತ್ತು ಸಾಕಾಣಿಕೆಗಳಿಗೆ ಅಗತ್ಯವಿರುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆ ಜಾರಿಗೊಳಿಸುತ್ತೇನೆ ಎಂದು ಭರವಸೆ ನೀಡಿದರು.

ಕುಟುಂಬಕ್ಕಾಗಿ ರಾಜಕಾರಣ ಮಾಡಲ್ಲ
ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಮತ್ತು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಅವರ ಹೆಸರು ಉಲ್ಲೇಘಿಸದೇ ವಿರೋಧ ಪಕ್ಷಗಳ ನಾಯಕರ ವಿರುದ್ಧ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದರು. ಕೆಲವು ವಿರೋಧ ಪಕ್ಷದವರು ತಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಅವರು ತಮ್ಮ ತಂದೆ, ಮಗ, ಮಗಳು ಮತ್ತು ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಆದರೆ ಬಿಹಾರವೇ ನನ್ನ ಕುಟುಂಬ, ರಾಜ್ಯದ ಜನರೆಲ್ಲ ನನ್ನ ಬಂಧುಗಳು. ನಾನು ಉತ್ತಮ ಕಾರ್ಯವನ್ನು ಮಾಡಿದ್ದೀನೋ ಇಲ್ಲವೋ ಎಂಬುದನ್ನು ನೀವೇ ತೀರ್ಮಾನಿಸಿ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದರು.

ವಲಸೆ ಕಾರ್ಮಿಕರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯ
ಬಿಹಾರಕ್ಕೆ ವಾಪಸ್ಸಾದ ಪ್ರತಿಯೊಬ್ಬ ವಲಸೆ ಕಾರ್ಮಿಕರಿಗಾಗಿ ಸರ್ಕಾರವು 5300 ರೂಪಾಯಿ ಖರ್ಚು ಮಾಡಿದೆ. ಕ್ವಾರೆಂಟೇನ್ ಕೇಂದ್ರಗಳಲ್ಲಿ ಇರಿಸಿ ಎಲ್ಲ ರೀತಿಯ ವೈದ್ಯಕೀಯ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಲಾಗಿದೆ. 15 ಲಕ್ಷ ಜನರಿಗೆ ಕ್ವಾರೆಂಟೇನ್ ಕೇಂದ್ರಗಳಲ್ಲಿಟ್ಟು ಚಿಕಿತ್ಸೆ ನೀಡಲಾಗಿದೆ. ರಾಜ್ಯದಲ್ಲಿ ಪ್ರತಿನಿತ್ಯ 3000 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗುತ್ತಿದೆ. ಇಷ್ಟಲ್ಲಾ ಾದರೂ ವಿರೋಧ ಪಕ್ಷಗಳು ಕೊವಿಡ್-19 ನಿರ್ವಹಣೆಯಲ್ಲಿ ಸರ್ಕಾರವು ವಿಫಲವಾಗಿದೆ ಎಂದು ದೂಷಿಸುತ್ತಿವೆ ಎಂದು ಸಿಎಂ ನಿತೀಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.












Click it and Unblock the Notifications