ಬಿಹಾರ ಗೆಲುವಿನ ಕುರಿತು ನಿತೀಶ್ ಕುಮಾರ್ ಮೊದಲ ಮಾತು
ಪಾಟ್ನಾ, ನವೆಂಬರ್.11: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಸರ್ವೋಚ್ಛ ತೀರ್ಪುದಾರರು ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬಿಹಾರದಲ್ಲಿ ಮತ್ತೊಂದು ಐತಿಹಾಸಿಕ ಗೆಲುವಿಗೆ ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎನ್ ಡಿಎ ಮೈತ್ರಿಕೂಟದ ಎಲ್ಲ ನಾಯಕರಿಗೂ ಹಾಗೂ ಪಕ್ಷದ ಕಾರ್ಯಕರ್ತರಿಗೂ ಸಿಎಂ ನಿತೀಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲುವು ಸಾಧಿಸಬೇಕಿದ್ದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೇಕೇ ಬೇಕು. ಬಿಜೆಪಿಗೆ ಹೋಲಿಸಿದಾಗ ಜೆಡಿಯು ಕಡಿಮೆ ಸ್ಥಾನ ಪಡೆದುಕೊಂಡರಬಹುದು. ಆದರೆ ಎನ್ ಡಿಎ ಮೈತ್ರಿಕೂಟದ ಗೆಲುವಿನಲ್ಲಿ ನಿತೀಶ್ ಕುಮಾರ್ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿಗಿಂತ ಜೆಡಿಯುಗೆ ಕಡಿಮೆ ಸ್ಥಾನ:
ಬಿಹಾರದಲ್ಲಿ ಸರ್ಕಾರ ರಚಿಸಲು ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳು ಬೇಕು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಎನ್ ಡಿಎ ಮೈತ್ರಿಕೂಟಕ್ಕೆ ಸಿಎಂ ಕುರ್ಚಿ ಖಾತ್ರಿಯಾಗಿದೆ. ನಿತೀಶ್ ಕುಮಾರ್ ಅವರೇ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವುದು ಚುನಾವಣಾ ಪೂರ್ವದಲ್ಲಿಯೇ ತೀರ್ಮಾನವಾಗಿದೆ. ಈ ಹಿನ್ನೆಲೆ ಯಾವುದೇ ಗೊಂದಲಗಳಿಲ್ಲ.
ಈ ನಡುವೆ ಬಿಹಾರ ಚುನಾವಣೆಯಲ್ಲಿ ಅಬ್ಬರಿಸಿದ ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು, ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.












Click it and Unblock the Notifications