"ಪತ್ನಿಯನ್ನು ಸಿಎಂ ಕುರ್ಚಿಯಲ್ಲಿ ಕೂರಿಸಿದ್ದೇ ಲಾಲೂ ಸಾಧನೆ"
ಪಾಟ್ನಾ, ಅಕ್ಟೋಬರ್.30: ಬಿಹಾರದಲ್ಲಿ ಹಿಂದುಳಿದ ವರ್ಗ ಮತ್ತು ಮಹಿಳೆಯರ ಸುರಕ್ಷತೆಯನ್ನು ನಿರ್ಲಕ್ಷಿಸಿದವರು ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ಪರಬಟ್ಟಾ ಎಂಬಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಆರ್ ಜೆಡಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಇಂದು ಮಾತನಾಡುತ್ತಿದ್ದಾರೆ. ಆದರೆ ಈ ಹಿಂದೆ ರಾಜ್ಯದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಮಹಿಳಾ ಸುರಕ್ಷತೆ ಬಗ್ಗೆ ನಿರ್ಲಕ್ಷಿಸಿದ ಜನರು ಇಂದು ಅದರ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಲಾಲೂ ಪ್ರಸಾದ್ ಯಾದವ್ ಅವರ ಹೆಸರನ್ನು ಉಲ್ಲೇಖಿಸದೇ ಸಿಎಂ ನಿತೀಶ್ ಕುಮಾರ್ ಕಿಡಿ ಕಾರಿದರು. "ಅವರು ಜೈಲಿಗೆ ತೆರಳುವ ವೇಳೆ ತಮ್ಮ ಪತ್ನಿಯನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿ ಹೋದರೇ ಹೊರತೂ, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿರಲಿಲ್ಲ ಎಂದು ದೂಷಿಸಿದರು.

1997ರಲ್ಲಿ ರಾಬ್ರಿ ದೇವಿಗೆ ಸಿಎಂ ಪಟ್ಟ:
1990ರಲ್ಲಿ ಬಿಹಾರದ ಮುಖ್ಯಮಂತ್ರಿ ಆಗಿದ್ದವರು ಬಹುಕೋಟಿ ಮೇವು ಹಗರಣದಲ್ಲಿ ಸಿಲುಕಿ ಜೈಲಿಗೆ ಹೋಗುವ ಮೊದಲು 1997ರಲ್ಲಿ ತಮ್ಮ ಪತ್ನಿಯನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದರು. ಇದನ್ನು ಹೊರತಾಗಿ ಯಾವ ಅಭಿವೃದ್ಧಿ ಕಾರ್ಯವನ್ನು ಮಾಡಿದ್ದಾರೆ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಮಹಿಳೆಯರು ಕೂಡಾ ಭಾಗವಹಿಸುವಂತಾ ಪರಿಸ್ಥಿತಿ ಸೃಷ್ಟಿಯಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರ ಕಲ್ಯಾಣಕ್ಕೆ ನಮ್ಮ ಸರ್ಕಾರವು ಸದಾ ಬದ್ಧವಾಗಿರುತ್ತದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರದಲ್ಲಿ ಈ ಹಿಂದಿನ ಆರ್ ಜೆಡಿ ನೇತೃತ್ವದ ಸರ್ಕಾರವೇ ಆಡಳಿತ ನಡೆಸಿತ್ತು. 1990 ರಿಂದ 2005ರವರೆಗೆ ಬಿಹಾರದಲ್ಲಿ ನಿಮ್ಮದೇ ಪಕ್ಷದ ಸರ್ಕಾರವು ಆಡಳಿತ ನಡೆಸಿತ್ತು. 15 ವರ್ಷಗಳಲ್ಲಿ ನೀವು ಕೇವಲ 95,000 ಜನರಿಗೆ ಮಾತ್ರ ಉದ್ಯೋಗ ನೀಡುವಲ್ಲಿ ಸಫಲರಾಗಿದ್ದೀರಿ. ಆದರೆ ನನ್ನ ಆಡಳಿತ ಅವಧಿಯಲ್ಲಿ ನಾನು 6 ಲಕ್ಷ ಜನರಿಗೆ ಉದ್ಯೋಗವನ್ನು ಸೃಷ್ಟಿಸಿ ಕೊಟ್ಟಿದ್ದೇನೆ ಎಂದು ಸಿಎಂ ನಿತೀಶ್ ಕುಮಾರ್ ಗುಡುಗಿದರು.












Click it and Unblock the Notifications