ಭಗವಾನ್ ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರು ಯಾರು: ಮೋದಿ ವಾಗ್ದಾಳಿ
ಪಾಟ್ನಾ, ನವೆಂಬರ್.01: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಂದಾದ ಸಂದರ್ಭದಲ್ಲಿ ಭಗವಾನ್ ರಾಮನ ಅಸ್ತಿತ್ವದ ಬಗ್ಗೆಯೇ ಪ್ರಶ್ನೆ ಎತ್ತಿದವರು ಯಾರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಳಿದ್ದಾರೆ.
ಬಿಹಾರ ವಿಧಾನಸಭೆಯ ಎರಡನೇ ಹಂತದ ಚುನಾವಣೆ ಹಿನ್ನೆಲೆ ಪಶ್ಚಿಮ ಚಂಪಾರಣ್ ನಲ್ಲು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಹೊರಟಾಗ ಅನೇಕ ರೀತಿಯ ಅಡೆತಡೆಗಳನ್ನು ಸೃಷ್ಟಿಸಿದ್ದರು. ಆದರೆ ಜನರ ಸಹಕಾರದಿಂದಾಗಿ ಅಯೋಧ್ಯೆಯಲ್ಲಿ ಇಂದು ಭವ್ಯ ಮಂದಿರ ನಿರ್ಮಾಣ ಕಾರ್ಯವು ನಡೆಯುತ್ತಿದೆ. ಇದರ ಮಧ್ಯೆ ಭಗವಾನ್ ರಾಮನ ಅಸ್ತಿತ್ವ ಪ್ರಶ್ನಿಸಿದವರು ಮತ್ತು ಮಂದಿರ ನಿರ್ಮಾಣಕ್ಕೆ ಅಡ್ಡಿಯಾದವರ ಬಗ್ಗೆ ನಾವು ಎಂದಿಗೂ ಮರೆಯುವುದಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.
ಬಿಹಾರ ಚುನಾವಣಾ ಕಣದಲ್ಲಿ ಎರಡನೇ ಬಾರಿ ರಾಮ ಮಂದಿರ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ, ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ವಿರುದ್ಧ ಮಾತನಾಡುವುದಕ್ಕೆ ವಿರೋಧ ಪಕ್ಷಗಳಿಗೆ ಯಾವುದೇ ಸಾಕ್ಷ್ಯಗಳು, ಪುರಾವೆಗಳು ಹಾಗೂ ತರ್ಕಗಳಿಲ್ಲ ಎಂದು ಪ್ರಧಾನಿ ಮೋದಿ ದೂಷಿಸಿದ್ದಾರೆ.

ರಾಮನ ಅಸ್ತಿತ್ವದ ಪ್ರಶ್ನೆ ಹುಟ್ಟಿದ್ದೇಕೆ?:
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಯೋಧ್ಯೆ ರಾಮ ಮಂದಿರಕ್ಕೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿರುವ ಬಗ್ಗೆ ಕೇಂದ್ರ ಸಚಿವ ಸ್ಮೃತಿ ಇರಾನಿ ಲೇವಡಿ ಮಾಡಿದ್ದರು. ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದವರು ಮತಕ್ಕಾಗಿ ಇಂದು ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಅಪಹಾಸ್ಯ ಮಾಡಿದ್ದರು. ಏಕೆಂದರೆ, 2007ರಲ್ಲಿ ಭಾರತೀಯ ಪುರಾತತ್ವ ಇಲಾಖೆಯ ಅಂಶವನ್ನು ಉಲ್ಲೇಖಿಸಿ ಶ್ರೀರಾಮನು ಅಸ್ತಿತ್ವದಲ್ಲಿದ್ದ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸುಪ್ರೀಂಕೋರ್ಟ್ ನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಅಫಿಡವಿಟ್ ಸಲ್ಲಿಸಿತ್ತು.












Click it and Unblock the Notifications