ಬಿಹಾರದ ಜನರಿಗೆ ಸರ್ಕಾರಿ ಉದ್ಯೋಗ ಏಕೆ ಸಿಗುತ್ತಿಲ್ಲ: ಮೋದಿ
ಪಾಟ್ನಾ, ಅಕ್ಟೋಬರ್.23: ಬಿಹಾರದ ಅಭಿವೃದ್ಧಿ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿತೀಶ್ ಕುಮಾರ್ ಅವರನ್ನೇ ಮತ್ತೊಮ್ಮೆ ಮುುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವ ಅಗತ್ಯತೆ ಬಗ್ಗೆ ಮತದಾರರಿಗೆ ಅರಿವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಸಸಾರಂ ಮತ್ತು ಗಯಾದಲ್ಲಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಭಗಲ್ಪುರ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಬಿಹಾರದ ಜನರು ಶಿಕ್ಷಣದ ಮೌಲ್ಯವನ್ನು ಸರಿಯಾಗಿ ಅರಿತುಕೊಂಡಿದ್ದಾರೆ. ಈ ಹಿನ್ನೆಲೆ ಐಐಟಿ ಮತ್ತು ಏಮ್ಸ್ ಸ್ಥಾಪಿಸುವುದಕ್ಕಾಗಿ ಹಗಲು-ರಾತ್ರಿ ಹೋರಾಟ ನಡೆಸುತ್ತಿದ್ದಾರೆ ಎಂದರು.
ನಿತೀಶ್ ಕುಮಾರ್ ಅವರ 10 ವರ್ಷಗಳ ಆಡಳಿತಾವಧಿ ವ್ಯರ್ಥ ಮಾಡಿದ ಯುಪಿಎ
ಬಿಹಾರ ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಸೇರಿದಂತೆ ಕೊವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರಧಾನಿ ಮೋದಿ ಕರೆ ಕೊಟ್ಟರು.
ಉದ್ಯಮಶೀಲತೆ ಬಗ್ಗೆ ಪ್ರಧಾನಿ ಮೋದಿ ಮಾತು:
ಬಿಹಾರದ ಜನರು ಉದ್ಯೋಗ ಮತ್ತು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವ ಸಾಮರ್ಥ್ಯವು ರಾಜ್ಯದ ಜನರಿಗೇನೋ ಇದೆ, ಆದರೆ ಅದನ್ನು ಒದಗಿಸುವುದು ಯಾರು ಎಂಬುದೇ ಪ್ರಶ್ನೆಯಾಗಿದೆ. ಸರ್ಕಾರಿ ಉದ್ಯೋಗವನ್ನು ನೀಡುವುದಕ್ಕೆ ಲಂಚ ನೀಡಬೇಕಾದ ಪರಿಸ್ಥಿತಿಯಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಹೀಗಾಗಿ ಸರ್ಕಾರಿ ಉದ್ಯೋಗ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ.
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಅನೇಕ ರೀತಿಯ ಹೋರಾಟ ನಡೆಸಲಾಗಿದೆ. ಐಐಟಿ ಮತ್ತು ಏಮ್ಸ್ ಗಾಗಿ 24/7 ಹೋರಾಡಿದ ರಾಜ್ಯದ ಜನರಿಗೆ ಗುಣಮಟ್ಟ ಶಿಕ್ಷಣದ ಮೌಲ್ಯವು ಸರಿಯಾಗಿ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮತದಾರರು ಆಶೀರ್ವದಿಸಬೇಕು. ಹಾಗಿದ್ದಲ್ಲಿ ಮಾತ್ರ ರಾಜ್ಯದ ಅಭಿವೃದ್ಧಿಯ ವೇಗವನ್ನು ಹೆಚ್ಚುಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಿಹಾರದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ:
ಬಿಹಾರ ವಿಧಾನಸಭೆ ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಅಕ್ಟೋಬರ್.28ರಂದು ದರ್ಭಂಗಾ, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ಪ್ರಧಾನಿ ಮೋದಿ ರ್ಯಾಲಿ ನಡೆಸಲಿದ್ದಾರೆ. ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ಜನರನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.