"ಉದ್ಯೋಗ ಸೃಷ್ಟಿಸದ ನಿತೀಶ್ ರಿಗೆ ಏಕೆ ಮತ್ತೊಂದು ಅವಕಾಶ?"
ಪಾಟ್ನಾ, ಅಕ್ಟೋಬರ್.26: ಬಿಹಾರದಲ್ಲಿ ಉದ್ಯೋಗ ಸೃಷ್ಟಿಸುವುದಕ್ಕೆ ಸಾಧ್ಯವಾಗದಿದ್ದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಅವಕಾಶ ಏಕೆ ನೀಡಬೇಕು ಎಂದು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಶ್ನೆ ಮಾಡಿದ್ದಾರೆ.
ಬಿಹಾರದಲ್ಲಿ ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ರೋಹ್ಟಸ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ತೇಜಸ್ವಿ ಯಾದವ್ ಮಾತನಾಡಿದರು.
ರಾಜ್ಯದಲ್ಲಿ ಬಡತನವನ್ನು ಹೋಗಲಾಡಿಸುವಲ್ಲಿ ಸಿಎಂ ನಿತೀಶ್ ಕುಮಾರ್ ವಿಫಲರಾಗಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವಲ್ಲಿಯೂ ಸೋತಿರುವ ಅವರಿಗೆ ಮತ್ತೊಂದು ಅವಕಾಶ ನೀಡುವ ಅಗತ್ಯವಿದೆಯೇ ಎಂದು ಪ್ರಶ್ನೆ ಮಾಡಿದರು.

ನಿಮ್ಮ ಹೆಲಿಕಾಪ್ಟರ್ ಅಂದು ಎಲ್ಲಿತ್ತು:
ಬಿಹಾರದ ವಲಸಿಗರು ಸಂಕಷ್ಟದ ಸಂದರ್ಭಗಳಲ್ಲಿ ಸಿಲುಕಿದಾಗ ನಿಮ್ಮ ಹೆಲಿಕಾಪ್ಟರ್ ಗಳು, ವಿಮಾನಗಳು ಎಲ್ಲಿ ಹೋಗಿದ್ದವು. ಅಂದು ನೀವು ಎಲ್ಲಿದ್ದಿರಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ರನ್ನು ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.
ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ:
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ತೀರ್ಮಾನಿಸಲಾಗಿದೆ. ಅಕ್ಟೋಬರ್.28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಪ್ರಕ್ರಿಯೆಗೂ 48 ಗಂಟೆಗಳಿಗೆ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗುತ್ತದೆ. ಮುಂದಿನ 24 ಗಂಟೆಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಮನೆ ಮನೆ ಪ್ರಚಾರ ನಡೆಸಲಿದ್ದು, ಮತದಾರರ ಓಲೈಕೆಗೆ ಕಸರತ್ತು ಮುಂದುವರಿಸಲಿದ್ದಾರೆ.
ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ. ನವೆಂಬರ್.10ರಂದು ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.












Click it and Unblock the Notifications