Breaking: ಅಗ್ನಿಪಥ್ ದಾಳಿಕೋರರ ಭೀತಿ ನಡುವೆ ಬಿಹಾರದ ಇಬ್ಬರು ಡಿಸಿಎಂಗೆ ವೈ ಕೆಟಗರಿ ಭದ್ರತೆ
ಪಾಟ್ನಾ, ಜೂನ್ 18: ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಲು ಯಾವುದೇ ರೀತಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪದ ನಡುವೆ ಬಿಹಾರದ ಇಬ್ಬರು ಉಪ ಮುಖ್ಯಮಂತ್ರಿಗಳಿಗೆ ವೈ ಕೆಟಗರಿ ಭದ್ರತೆಯನ್ನು ಘೋಷಿಲಾಗಿದೆ.
ಅಲ್ಪಾವಧಿಯ ನೇಮಕಾತಿ ಯೋಜನೆಯು ಉದ್ಯೋಗಾಕಾಂಕ್ಷಿಗಳನ್ನು ಕೆರಳಿಸಿದ್ದು, ಬಿಜೆಪಿಯ ವಿರುದ್ಧ ಯುವಕರು ಸಿಡಿದೆದ್ದಿದ್ದಾರೆ. ಈ ಹಿನ್ನೆಲೆ ಬಿಜೆಪಿಯ ಇಬ್ಬರು ಡಿಸಿಎಂಗಳು ಸೇರಿದಂತೆ ಒಟ್ಟು 10 ಮಂದಿ ಬಿಜೆಪಿ ಶಾಸಕರಿಗೆ 'ವೈ' ಕೆಟಗರಿ ಭದ್ರತೆಯನ್ನು ನೀಡಿದೆ.
ಮಂಗಳವಾರ ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ನಂತರದಲ್ಲಿ ಬಿಹಾರದಲ್ಲಿ ಪ್ರತಿಭಟನೆ ಶುರುವಾಗಿದ್ದು, ಶುಕ್ರವಾರ ಅದು ಹಿಂಸಾಚಾರಕ್ಕೆ ತಿರುಗಿತು. ಕೆರಳಿದ ಪ್ರತಿಭಟನಾಕಾರರು ಬಿಜೆಪಿಗೆ ರೈಲುಗಳಿಗೆ ಬೆಂಕಿ ಹಚ್ಚಿದರು, ನಿಲ್ದಾಣಗಳನ್ನು ಧ್ವಂಸಗೊಳಿಸಿದರು. ಬಿಜೆಪಿ ನಾಯಕರ ಕಚೇರಿಗಳು, ಮನೆಗಳು ಮತ್ತು ಕಾರುಗಳ ಮೇಲೆ ದಾಳಿ ನಡೆಸಿದರು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅಗ್ನಿಪಥ್ ಯೋಜನೆ ಬಗ್ಗೆ ತಿಳಿಯಿರಿ: ಕೇಂದ್ರ ಸರ್ಕಾರವು ಮಂಗಳವಾರ ಅಗ್ನಿಪಥ್ ಅನ್ನು ಅನಾವರಣಗೊಳಿಸಿದ್ದು, ಇದನ್ನು "ಪರಿವರ್ತನೆ"ಯ ಯೋಜನೆ ಎಂದು ಕರೆದಿದೆ. ದೇಶದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ.
ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ. ಆದರೆ ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು. ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ.
ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.












Click it and Unblock the Notifications