ಭಾರತದ ವಿರುದ್ಧ ಇಮ್ರಾನ್ ಖಾನ್ ಮಾತನಾಡಲು ಸಿಂಗ್, ಸೋನಿಯಾ ಕಾರಣ: ಬಿಜೆಪಿ ಆರೋಪ
ಪುಣೆ, ಸೆಪ್ಟೆಂಬರ್ 28: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಭಾರತದ ಪ್ರತಿಷ್ಠಿಗೆ ಧಕ್ಕೆ ಬರುವ ರೀತಿಯಲ್ಲಿ ಮಾತನಾಡಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸಹಾಯ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ವಿಶ್ವಸಂಸ್ಥೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಇಮ್ರಾನ್ ಖಾನ್ ಅವರು ಭಾರತದ ವಿರುದ್ಧ ಮಾತನಾಡಲು ಕಾಂಗ್ರೆಸ್ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ್ದರು. ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಇಮ್ರಾನ್ ಖಾನ್, 'ಆರೆಸ್ಸೆಸ್ ಶಿಬಿರಗಳಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರದ ಗೃಹ ಸಚಿವರು ಹೇಳಿಕೆ ನೀಡಿದ್ದರು' ಎಂದಿದ್ದಾರೆ.
ಇಮ್ರಾನ್ ಖಾನ್ 'ರಕ್ತಪಾತ' ಭಾಷಣಕ್ಕೆ ಭಾರತದ ತಿರುಗೇಟು
ಯುನ್ಜಿಎದಲ್ಲಿ ಇಮ್ರಾನ್ ಖಾನ್ ಉಲ್ಲೇಖಿಸಿದ ಆರೆಸ್ಸೆಸ್ ವಿರೋಧಿ ಹೇಳಿಕೆಗೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸುಶೀಲ್ ಕುಮಾರ್ ಶಿಂಧೆ ಅವರಿಂದ ಕ್ಷಮೆಗೆ ಆಗ್ರಹಿಸಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ವಿರುದ್ಧ ವಾಗ್ದಾಳಿ ನಡೆಸಲು ಇಮ್ರಾನ್ ಖಾನ್ ಅವರಿಗೆ ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ ಸುಶೀಲ್ ಕುಮಾರ್ ಶಿಂಧೆ ಅವರು ಗೃಹಸಚಿವರಾಗಿದ್ದರು. 2013ರಲ್ಲಿ ಜೈಪುರದಲ್ಲಿ ಅವರು ಈ ಹೇಳಿಕೆ ನೀಡಿದ್ದರು. 'ಹಿಂದೂಗಳು, ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕೆ ಸುಶೀಲ್ ಕುಮಾರ್ ಶಿಂಧೆ ಕ್ಷಮೆ ಕೋರಬೇಕು' ಎಂದು ಪಾತ್ರ ಆಗ್ರಹಿಸಿದ್ದಾರೆ.