ರಾಯಚೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದ ಬಾಲಕ ಸಾವು
ರಾಯಚೂರು, ಜೂನ್ 04: ಮಹಾರಾಷ್ಟ್ರದಿಂದ ಬಂದು ರಾಯಚೂರಿನ ದೇವದುರ್ಗದ ಕ್ವಾರಂಟೈನ್ ಕೇಂದ್ರದಲ್ಲಿದ್ದ 14 ವರ್ಷದ ಬಾಲಕ ಇಂದು ಸಾವನ್ನಪ್ಪಿದ್ದಾನೆ.
ಈ ಬಾಲಕನ ತಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರಿಂದ ಕುಟುಂಬವು ಅಲ್ಲಿನ ಅಂದೇರಿ ನಗರದಲ್ಲಿ ವಾಸವಾಗಿತ್ತು. ಇವರು ಮೂಲತಃ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದವರು. ನಾಲ್ಕು ತಿಂಗಳ ಹಿಂದೆ ಈತನ ತಂದೆ-ತಾಯಿ, ತಂಗಿ ಮತ್ತು ತಮ್ಮ ಮದರಕಲ್ ಗ್ರಾಮಕ್ಕೆ ಬಂದಿದ್ದರು. ಆದರೆ ಪರೀಕ್ಷೆ ಇದ್ದುದರಿಂದ ಈ ಬಾಲಕ ಅಲ್ಲೇ ಉಳಿದುಕೊಂಡಿದ್ದ.
ದೇಶಾದ್ಯಂತ ಲಾಕ್ಡೌನ್ ಘೋಷಿಸಿ, ಬಸ್, ರೈಲು ಸಂಚಾರ ನಿಲ್ಲಿಸಿದ್ದರಿಂದ ಬಾಲಕ ಮುಂಬೈನಲ್ಲೇ ಉಳಿದಿದ್ದ. ಲಾಕ್ಡೌನ್ ಸಡಿಲಿಕೆಯಿಂದಾಗಿ ಮೇ 16 ರಂದು ಮಹಾರಾಷ್ಟ್ರದಿಂದ ದೇವದುರ್ಗಕ್ಕೆ ಬಂದಿದ್ದ. ಆತನನ್ನು ದೇವದುರ್ಗದ ಕ್ವಾರಂಟೈನ್ ಕೇಂದ್ರದಲ್ಲಿಡಲಾಗಿತ್ತು. ಬಾಲಕನಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದು, ವರದಿಯು ನೆಗೆಟಿವ್ ಎಂದು ಬಂದಿತ್ತು.

ಬಾಲಕ ಕೆಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇಂದು ಹೊಟ್ಟೆ ನೋವು ಹೆಚ್ಚಾಗಿದ್ದರಿಂದ ದೇವದುರ್ಗದಿಂದ ರಾಯಚೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಈ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ. ಮತ್ತೆ ಕೊರೊನಾ ವೈರಸ್ ಪರೀಕ್ಷೆ ನಡೆಸಲು ಬಾಲಕನ ಮೃತದೇಹದಿಂದ ಗಂಟಲು ದ್ರವವನ್ನು ತೆಗೆದು ಲ್ಯಾಬ್ ಗೆ ಕಳುಹಿಸಲಾಗಿದೆ.












Click it and Unblock the Notifications