ರಾಯಚೂರು ಜುರಾಲಾ ಯೋಜನೆ ಬಾಧಿತ ಸೇತುವೆ ನಿರ್ಮಾಣಕ್ಕೆ ಸಿಎಂ ನಿರ್ದೇಶನ
Recommended Video
ರಾಯಚೂರು, ಡಿಸೆಂಬರ್ 13: ಹಲಾವರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ಜಿಲ್ಲೆಯ ಪ್ರಿಯದರ್ಶಿನಿ ಜುರಾಲಾ ಯೋಜನೆಯಡಿ ಹಿನ್ನೀರಿನಿಂದ ಮುಳುಗಡೆಯಾಗಿ ಶಿಥಿಲಗೊಂಡ ಅತ್ಕೂರು, ಡೊಂಗರಾಂಪುರ, ಬುರ್ದಿಪಾಡು ಸೇತುವೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಬುಧವಾರ ರಾತ್ರಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಉನ್ನತಮಟ್ಟದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು. ಸಭೆಯಲ್ಲಿ ಲೋಕೋಪಯೋಗಿ ಸಚಿವರಾದ ರೇವಣ್ಣ, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ, ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ ಕೆ ಎಸ್ ಕೃಷ್ಣರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ರಾಜ್ಯದ ಗಡಿಭಾಗದಲ್ಲಿ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿರುವುದರಿಂದ ಜನಸಾಮಾನ್ಯರು ತೊಂದರೆಗೊಳಗಾಗಿರುವುದನ್ನು ತಾನು ಗಮನಿಸಿದ್ದು, ಇದರಲ್ಲಿ ಕಾಮಗಾರಿ ಗುತ್ತಿಗೆ ಪಡೆದವರ ನಿರ್ಲಕ್ಷ್ಯ ಗಮನಕ್ಕೆ ಬಂದಿದೆ, ಜನರು ನೊಂದಿರುವುದನ್ನು ನೋಡುತ್ತಿದ್ದೇನೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿ, ಜನತೆಯು ಸೇತವೆಗಳಿಲ್ಲದೆ ಸಂಪರ್ಕ ಕೊರತೆಯಿಂದ ಪಡುತ್ತಿರುವ ತೊಂದರೆಗಳನ್ನು ಗಮನಿಸಿದ್ದೇನೆ. ಈ ನಿಟ್ಟಿನಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ, ಆದರೂ ಕೆಲವು ತಾಂತ್ರಿಕ ಕಾರಣಗಳಿಂದ ಕಾಮಗಾರಿಗಳು ನೆನೆಗುದಿಗೆ ಬಿದ್ದಿತ್ತು.ಸಿಎಂ ಆಡಳಿತಾತ್ಮಕ ಅನುಮೋದನೆ ನೀಡಿರುವುದರಿಂದ ಸಮಯಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.