ಕಳಪೆ ಊಟ: ಡಿಸಿಎಂ ಕಾರಜೋಳ ತರಾಟೆ, ಎಚ್ಚರಿಕೆ!
ಬೆಂಗಳೂರು, ಫೆ. 23: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಉಮಲೂಟಿ ವಸತಿ ನಿಲಯಕ್ಕೆ ಡಿಸಿಎಂ ಗೋವಿಂದ ಕಾರಜೋಳ ಅವರು ನಿನ್ನೆ ತಡರಾತ್ರಿ ದಿಢೀರ್ ಭೇಟಿ ಕೊಟ್ಟು, ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳಿಗಾಗಿ ತಯಾರಿಸಲಾಗಿದ್ದ ಆಹಾರವನ್ನು ತಾವೇ ಖುದ್ದಾಗಿ ರುಚಿ ನೋಡಿ, ಕಳೆಪೆಯಾಗಿದ್ದನ್ನು ಕಂಡು ಹಾಸ್ಟೆಲ್ ವಾರ್ಡನ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ನಿಲಯಗಳ ಉತ್ತಮ ನಿರ್ವಹಣೆಗೆ ಸರ್ಕಾರಿಂದ ಕೋಟ್ಯಂತರ ರೂಪಾಯಿಗಳ ಅನುದಾನ ನೀಡುತ್ತಿದ್ದರೂ, ಕಳಪೆ ಗುಣಮಟ್ಟದ ಆಹಾರ ಕೊಡುತ್ತಿರುವುದೇಕೆ ಎಂದು ಹಾಸ್ಟೆಲ್ ವಾರ್ಡನ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಹಾಸ್ಟೆಲ್ ಅವ್ಯವಸ್ಥೆ ನೋಡಿದ ತಕ್ಷಣ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕುಮಾರ ನಾಯಕ್ ಅವರಿಗೆ ದೂರವಾಣಿ ಕರೆ ಮಾಡಿ, ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಕಾರಜೋಳ ಅವರು ಸೂಚಿಸಿದ್ದಾರೆ.
ರಾಜ್ಯದಲ್ಲಿ 4 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವ್ಯಾಸಂಗ: ರಾಜ್ಯದಲ್ಲಿ ಒಟ್ಟು 4 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆ, ತಾಲೂಕು, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಊಟ ಮಾಡಿ ಊಟ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಬೇಕು.
ಯಾವುದೇ ವಿದ್ಯಾರ್ಥಿಗೂ ಕಳಪೆ ಗುಣಮಟ್ಟದ ಊಟ ಹಾಗೂ ಸೌಲಭ್ಯ ನೀಡಬಾರದು. ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಊಟೋಪಚಾರ ನೀಡುವುದರ ಜೊತೆಗೆ ಉತ್ತಮ ಪರೀಕ್ಷಾ ಫಲಿತಾಂಶ ಬರುವಂತೆ ಪಾಠ ನಡೆಸಬೇಕು. ವಿಶೇಷ ತರಗತಿಗಳನ್ನು ನಡೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ವಾರ್ಡನ್ ಹಾಗೂ ಶಿಕ್ಷಕರ ಪಾತ್ರ ಮಹತ್ತರವಾದುದು. ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು. ಬೇಜಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಕಾರಜೋಳ ಎಚ್ಚರಿಕೆ ನೀಡಿದರು.