ಉಪ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ದೇವೇಗೌಡರ ಪ್ರತಿಕ್ರಿಯೆ!
ಬೆಂಗಳೂರು, ಫೆ. 10: ವಿಧಾನ ಪರಿಷತ್ನಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶುರುವಾಗಿದೆ. ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ಎರಡೂ ಪಕ್ಷಗಳು ಮುಂದಿನ ರಾಜಕೀಯ ಲೆಕ್ಕಾಚಾರಗಳೊಂದಿಗೆ ಈ ಹೊಂದಾಣಿಕೆ ಮಾಡಿಕೊಂಡಿದ್ದು, ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ಗೆ ಮೈತ್ರಿಯಿಂದಾಗಿ ಹಿನ್ನಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಜೆಡಿಎಸ್ ತನ್ನ ನಿಜರೂಪ ತೋರಿಸಿದೆ. ಜೊತೆಗೆ ಜೆಡಿಎಸ್ ನಾಯಕರ ಜಾತ್ಯತೀತ ಬಣ್ಣ ಕೂಡ ಬಯಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಯಚೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವ ಕುರಿತು ಕುಮಾರಸ್ವಾಮಿ ಅವರು ಕೈಗೊಂಡಿರುವ ನಿರ್ಧಾರ ಅಂತಿಮ ಎಂದು ದೇವೇಗೌಡರು ಹೇಳಿಕೆ ನೀಡಿದ್ದಾರೆ.
ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ
ವಿಧಾನ ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವ ಸಂದರ್ಭದಲ್ಲಿ ಮತ್ತೆ ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದೆ. ಅವುಗಳಲ್ಲಿ ಒಂದು ಕ್ಷೇತ್ರಗಳಲ್ಲಿ ಹಾಲಿ ಜೆಡಿಎಸ್ ಶಾಸಕರು ಅಕಾಲಿಕ ಮರಣಹೊಂದಿದ್ದರಿಂದ ಖಾಲಿ ಆಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರು ಇತ್ತೀಚೆಗೆ ನಿಧನರಾಗಿದ್ದು, ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಜೊತೆಗೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಜೊತೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿನ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕಿದೆ. ಈ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ಕುರಿತು ಎಚ್ಡಿಕೆ ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಅಭ್ಯರ್ಥಿ ಹಾಕುವ ಬಗ್ಗೆ ಎಚ್ಡಿಕೆ ಹೇಳಿಕೆ
ಉಪ ಚುನಾವಣೆಯಲ್ಲಿ ನಾವು ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಅದನ್ನು ಉಲ್ಲೇಖಿಸಿರುವ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ನಮ್ಮ ಪಕ್ಷದ ಅಬ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಸೂಕ್ತ ನಿರ್ಧಾರ. ಹೀಗಾಗಿ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಸರ್ಕಾರದ ಕುರಿತು
2023 ರಲ್ಲಿ ರಾಜ್ಯಸದಲ್ಲಿ ಚುನಾವಣೆ ಎದುರಾಗಲಿದೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ನಾನು ಸಂಪೂರ್ಣವಾಗಿ ಪಕ್ಷ ಕಟ್ಟುವುದರಲ್ಲಿ ತೊಡಗಿಸಿಕೊಂಡಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಅಸ್ಥಿರತೆಗೆ ನಾನು ಮುಂದಾಗುವುದಿಲ್ಲ. ಜಾತ್ಯಾತೀತ ಜನತಾದಳದ ವರಿಷ್ಠನಾಗಿ ತೀರ್ಮಾನ ಮಾಡಿದ್ದೇನೆ ಎಂದು ದೇವೇಗೌಡರು ತಮ್ಮ ಮುಂದಿನ ನಿರ್ಧಾರವನ್ನು ತಿಳಿಸಿದ್ದಾರೆ.
ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ನಮ್ಮಲ್ಲಿಯೂ ಈಗ 34 ಜನ ಶಾಸಕರಿದ್ದಾರೆ. ಆದರೂ ನಾವು ವಿಲೀನ ಆಗುತ್ತೇವೆ ಎಂದು ಸುದ್ದಿ ಹಬ್ಬಿಸುತ್ತಾರೆ. ನಾನು ಯಾರ ಬಗ್ಗೆ ಟೀಕೆ ಮಾಡಲ್ಲ. ಕುಮಾರಸ್ವಾಮಿ ಸಿಎಂ ಆಗಬೇಕು ಅಂತಾ ಯಾರ ಮನೆಗೂ ಹೋಗಿಲ್ಲ ಎಂದು ಮತ್ತೊಮ್ಮೆ ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.
Recommended Video
ಬಿಜೆಪಿ ಗೆಲ್ಲುವುದಿಲ್ಲ
ನಾಲ್ಕು ರಾಜ್ಯಗಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ. ತಮಿಳುನಾಡಿನಲ್ಲಿ ಈಗ ಸ್ಟಾಲಿನ್ ಅವರಿಗೆ ಹೆಚ್ಚು ಶಕ್ತಿ ಇದೆ. ಹೀಗಾಗಿ ಬಿಜೆಪಿಗೆ ತಮಿಳುನಾಡಿನಲ್ಲಿ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ. ಕೇರಳದಲ್ಲಿ ಎಲ್ಡಿಎಫ್ಗೆ ಶಕ್ತಿ ಇದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು, ಮತಗಳು ಕಡಿಮೆ ಬಂದರೂ ಈ ಬಾರಿ ಮಮತಾ ಮತ್ತೆ ಅಧಿಕಾರ ಪಡೆಯಬಹುದು. ಇಡೀ ಬಿಜೆಪಿ ಟೀಂ ಪಶ್ಚಿಮ ಬಂಗಾಳದಲ್ಲಿ ನೆಲೆಯೂರಿದೆ. ಜೊತೆಗೆ ಅಧಿಕಾರಿಗಳ ಬದಲಾವಣೆಯೂ ಪಶ್ಚಿಮ ಬಂಗಾಳದಲ್ಲಿ ಆಗುತ್ತಿದೆ. ಆದರೂ ಮೂರನೇ ಬಾರಿ ಮಮತಾ ಬ್ಯಾನರ್ಜಿ ಸಿಎಂ ಆಗಲಿದ್ದಾರೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.