ಮಾಯಾವತಿ ಹೇಳಿದರೆ ಮತ್ತೆ ಸಂಪುಟ ಸೇರುವೆ : ಎನ್.ಮಹೇಶ್
ರಾಯಚೂರು, ಜೂನ್ 12 : ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೂನ್ 14ರ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆ ನಡೆಯಲಿದೆ. ಬಿಎಸ್ಪಿ ಶಾಸಕ ಎನ್.ಮಹೇಶ್ ಮತ್ತೆ ಸಂಪುಟ ಸೇರುವ ಕುರಿತು ಮಾತನಾಡಿದ್ದಾರೆ.
ರಾಯಚೂರಿನಲ್ಲಿ ಈ ಕುರಿತು ಮಾತನಾಡಿರುವ ಎನ್.ಮಹೇಶ್ ಅವರು, 'ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಹೇಳಿದರೆ ಮಾತ್ರ ಮತ್ತೆ ನಾನು ಸಂಪುಟ ಸೇರುತ್ತೇನೆ' ಎಂದು ಹೇಳಿದರು.

'ಇಲ್ಲಿಯ ತನಕ ಸಚಿವರಾಗಿ ಎಂದು ಪಕ್ಷದ ಹೈಕಮಾಂಡ್ನಿಂದ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಹೇಳಿದರೆ ಸಂಪುಟ ಸೇರುತ್ತೇನೆ. ಸಂಪುಟದಿಂದ ಹೊರಗಿರಲು ಹೇಳಿದರೆ ಸೇರುವುದಿಲ್ಲ. ಮಾಯಾವತಿ ಅವರ ತೀರ್ಮಾನಕ್ಕೆ ನಾನು ಬದ್ಧ' ಎಂದು ತಿಳಿಸಿದರು.
'ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ಮುಖ್ಯಮಂತ್ರಿಗಳು ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಆಕರ್ಷಿತರಾಗುವುದನ್ನು ತಪ್ಪಿಸಲು ಆಂಗ್ಲ ಮಾಧ್ಯಮ ಶಾಲೆಗಳು ಆರಂಭವಾಗುತ್ತಿವೆ' ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಎನ್.ಮಹೇಶ್ ಬೆಂಬಲ ನೀಡಿದ್ದಾರೆ. ಆದ್ದರಿಂದ, ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.
ಪ್ರಾಥಮಿ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಆದರೆ, 2018ರ ಅಕ್ಟೋಬರ್ 11ರಂದು ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಈಗ ಪುನಃ ಸಂಪುಟ ಸೇರುವ ಮಾತುಗಳನ್ನು ಆಡಿದ್ದಾರೆ.












Click it and Unblock the Notifications