ಟಿಕೆಟ್ ಆಕಾಂಕ್ಷಿಗಳಿಂದ ಮುಖಂಡರ ಸಭೆ: ಬಿಜೆಪಿ, ಕಾಂಗ್ರೆಸ್ನಲ್ಲಿ ಚಟುವಟಿಕೆ ಶುರು- ಲೋಕ ಸಮರಕ್ಕೆ ಓಲೈಕೆ !
ರಾಯಚೂರು ಫೆಬ್ರವರಿ 19: ಲೋಕಸಭೆ ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಬಾಕಿ ಇದ್ದು ಟಿಕೆಟ್ ಘೋಷಿಸುವ ಮೊದಲೇ ಆಕಾಂಕ್ಷಿಗಳು ಮುಖಂಡರನ್ನು ಓಲೈಸಲು ಮುಂದಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಈ ಸಲ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ವಚಿಚಿತರಾದ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ರವಿ ಪಾಟೀಲ್ ಅವರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ರಾಜ್ಯದ ಮುಖಂಡರೊಂದಿಗೆ ಸುತ್ತಾಟ ನಡೆಸಿದ್ದು ಜಾತ್ರೆ, ಮದುವೆ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಜಿ ಸಂಸದ ದಿ.ವೆಂಕಟೇಶ ನಾಯಕ ಅವರ ಸೊಸೆಯೂ ಅಭ್ಯರ್ಥಿಯಾಗುವ ಇಂಗಿತ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪ್ರಾರಂಭಿಸಿದ್ದಾರೆ.

ಬಿಜೆಪಿಯಲ್ಲೂ ಟಿಕೆಟ್ ಆಕಾಂಕ್ಷಿಗಳು ಗುಪ್ತ ಸಭೆ ನಡೆಸುತ್ತಿದ್ದಾರೆ. ಹಾಲಿ ಸಂಸದ ರಾಜಾ ಅಮರೇಶ್ವರ್ ನಾಯಕ ಅವರು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಓಡಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಬಗ್ಗೆ ಹೇಳುತ್ತಿದ್ದಾರೆ. ಇದು ಒಂದು ಸಾರಿ ಅವಕಾಶ ಮಾಡಿಕೊಡಿ ಎಂದು ಬಿಜೆಪಿ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾತು ಬಿಜೆಪಿ ವಲಯದಿಂದ ಕೇಳಿ ಬರುತ್ತಿದೆ.
ಇನ್ನು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಮಾನ್ವಿ ವಿಧಾನಸಭೆ ಕ್ಷೇತ್ರದಿಂದ ಸೋತಿರುವ ಮಾಜಿ ಸಂಸದ ಬಿ.ವಿ.ನಾಯಕ್ ಅವರು ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುವೆ ಎನ್ನುತ್ತಲೇ ಲಾಬಿ ಪ್ರಾರಂಭಿಸಿದ್ದಾರೆ. ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಜಿಲ್ಲಾಧ್ಯಕ್ಷರಾಗುತ್ತಿದ್ದಂತೆ ಬಿ.ವಿ.ನಾಯಕರಿಗೆ ಬಲ ಬಂದಿದೆ.
ಜಿ ಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಟಿಕೆಟ್ ಗೆ ಕಸರತ್ತು ನಡೆಸಿದ್ದಾರೆ. ಆದರೆ ಜೆಡಿಎಸ್ ನಲ್ಲಿ ಯಾವುದೇ ಚಟುವಟಿಕೆ ನಡೆದಿಲ್ಲ. ದೇವದುರ್ಗ ಶಾಸಕರು ಹಾಗೂ ಪದಾಧಿಕಾರಿಗಳು ಸಭೆ ನಡೆಸದಿರುವುದು ಪಕ್ಷದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಒಟ್ಟಿನಲ್ಲಿ ಟಿಕೆಟ್ ಸಿಗುವ ಮೊದಲೇ ಆಕಾಂಕ್ಷಿಗಳು ಮಾತ್ರ ಸದ್ದಿಲ್ಲದೇ ಸಭೆ ನಡೆಸಿರುವುದು ಮಾತ್ರ ಚರ್ಚೆಗೆ ಗ್ರಾಸವಾಗಿದೆ.
ರಾಯಚೂರು ಲೋಕಸಭೆ ಚುನಾವಣೆಗೆ ಜಿಲ್ಲಾ ಉಸ್ತುವಾರಿಯಾಗಿ ಹೈಕಮಾಂಡ್ ನೇಮಿಸಿದೆ. ಅಭ್ಯರ್ಥಿಗಳ ಕುರಿತು ಸರ್ವೆ ಮಾಡಲಾಗಿದ್ದು ಗೆಲುವು ಹಾಗೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಲೋಕಸಭೆ ಚುನಾವಣೆ ಉಸ್ತುವಾರಿ ಮತ್ತು ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ಹಾಗೂ ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರವಾಗಿದೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಗೆಲುವಿಗೆ ಶ್ರಮಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.
ಲೋಕಸಭೆ ಚುನಾವಣೆಗೆ ಯಾವುದೇ ಸಿದ್ಧತೆ ನಡೆದಿಲ್ಲ. ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹೈಕಮಾಂಡ್ ಗೆ ಮನವಿ ಮಾಡಲಾಗಿದೆ. ಯಾವುದೇ ಮಾತುಕತೆ ನಡೆದಿಲ್ಲ ಎಂದು ಜೆಡಿಎಸ್ ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ನಾಯಕ ಹೇಳಿದರು.












Click it and Unblock the Notifications