ಕರ್ನಾಟಕದ ಈ ಜಿಲ್ಲೆ ಕೃಷಿ, ಜಲಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶಕ್ಕೆ ಪ್ರಥಮ
ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ ಈ ಜಿಲ್ಲೆಯು ಕೃಷಿ ಮತ್ತು ಜಲಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಕನ್ನಡಿಗರ ಹೆಮ್ಮೆಗೆ ಕಾರಣವಾಗಿದೆ.
ಹೌದು. ಕರ್ನಾಟಕದ ರಾಯಚೂರು ಜಿಲ್ಲೆಯು ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಹತ್ವಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ರಾಯಚೂರು ಜಿಲ್ಲೆ ಮೊದಲ ರ್ಯಾಂಕ್ ಪಡೆದುಕೊಂಡಿದೆ.

2023ರ ಮಾರ್ಚ್ನಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಆಧಾರದ ಮೇಲೆ ರಾಯಚೂರು ಜಿಲ್ಲೆಗೆ ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ಮೊದಲ ಸ್ಥಾನಕ್ಕೆ ಭಾಜನವಾಗಿದೆ. ಕರ್ನಾಟಕದಲ್ಲಿ ರಾಯಚೂರು ಮತ್ತು ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿದ್ದು, ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಎಲ್ಲವನ್ನೂ ಮೀರಿಸಿ ಫಸ್ಟ್ ರ್ಯಾಂಕ್ ಗಳಿಸಿದೆ.
ಇದೇ ವೇಳೆ ಕಾರ್ಯಕ್ಷಮತೆ ಆಧಾರದ ಮೇಲೆ, ಮೊದಲ ಸ್ಥಾನ ಪಡೆದ ಹಿನ್ನೆಲೆ ರಾಯಚೂರು ಜಿಲ್ಲಾಡಳಿತ ಕೇಂದ್ರ ಸರ್ಕಾರದಿಂದ ಹೆಚ್ಚುವರಿ 3 ಕೋಟಿ ರೂ. ಅನುದಾನ ಪಡೆಯಲು ಅರ್ಹತೆ ಪಡೆದಿದೆ.
ಕೃಷಿ ಕ್ಷೇತ್ರ ವಿಸ್ತರಣೆ, ಜಲ ಸಂರಕ್ಷಣೆ ವಿಧಾನಗಳು ಮತ್ತು ನೀತಿ ಆಯೋಗದ ಮಾನದಂಡಗಳ ಅಡಿ ಮಂಡಿಸಿರುವ ಜಿಲ್ಲೆಯ ಸ್ಥಿತಿಗತಿ ವರದಿ ಆಧಾರದ ಮೇಲೆ ರಾಯಚೂರು ಜಿಲ್ಲೆಗೆ ಪ್ರಥಮ ಸ್ಥಾನ ನೀಡಲಾಗಿದೆ. ಈ ವಿಚಾರವಾಗಿ ಕೇಂದ್ರ ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ. ರಾಧಾ ಅವರು ಕರ್ನಾಟಕ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು ಅಭಿನಂದನೆ ತಿಳಿಸಿದ್ದಾರೆ.

ಇದೇ ವೇಳೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ನೀತಿ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೀಗ ಹಂಚಿಕೆಯಾದ ಹೆಚ್ಚುವರಿ 3 ಕೋಟಿ ರೂ. ಅನುದಾನಕ್ಕೆ ಕ್ರಿಯಾ ಯೋಜನಾ ವರದಿಯನ್ನು ನೀಡಲು ನೀತಿ ಆಯೋಗ ಸೂಚಿಸಿದೆ.
ಕೃಷಿ, ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸೇರಿ ಜಿಲ್ಲೆಗಳ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸುವ ನೀತಿ ಆಯೋಗ, ಮಹತ್ವಾಕಾಂಕ್ಷೆ ಜಿಲ್ಲೆಗಳ ಮೇಲೆ ನಿಗಾ ಇರಿಸುತ್ತದೆ. ಎಲ್ಲ ಮಾನದಂಡಗಳ ಆಧಾರದ ಮೇಲೆ ಜಿಲ್ಲೆಗಳ ಸ್ಥಾನಗಳನ್ನು ನಿರ್ಧರಿಸುತ್ತದೆ.












Click it and Unblock the Notifications