ರಾಯಚೂರು ವಿದ್ಯಾರ್ಥಿನಿ ಸಾವು : ಆರೋಪಿಗೆ ನ್ಯಾಯಾಂಗ ಬಂಧನ
ರಾಯಚೂರು, ಮೇ 02 : ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣದ ಆರೋಪಿ ಸುದರ್ಶನ್ ಯಾಧವ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಸಹಜ ಸಾವಿನ ಕುರಿತು ಸಿಐಡಿ ತನಿಖೆ ನಡೆಯುತ್ತಿದೆ.
ಗುರುವಾರ ಸಿಐಡಿ ಪೊಲೀಸರು ಆರೋಪಿ ಸುದರ್ಶನ್ ಯಾಧವ್ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ರಾಯಚೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್ ಮೇ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ರಾಯಚೂರು ವಿದ್ಯಾರ್ಥಿನಿ ಸಾವು : ಆರೋಪಿಯನ್ನು ವಶಕ್ಕೆ ಪಡೆದ ಸಿಐಡಿ
ಕಳೆದ 9 ದಿನಗಳಿಂದ ಸುದರ್ಶನ್ ಯಾಧವ್ ಸಿಐಡಿ ಕಸ್ಟಡಿಯಲ್ಲಿದ್ದ. ಆರೋಪಿಯನ್ನು ಎರಡು ಬಾರಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರೋಪಿಯ ಚಲನವಲನದ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ.
ಮೃತಪಟ್ಟ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಓಡಾಡಿದ ಸ್ಥಳ, ಆಕೆಯ ಶವ ಪತ್ತೆಯಾದ ಸ್ಥಳ, ಆಕೆಯ ಸಾವಿನ ಬಳಿಕ ಆರೋಪಿ ಮಂತ್ರಾಲಯಕ್ಕೆ ತೆರಳಿದ್ದ. ಅಲ್ಲಿಯೂ ಆರೋಪಿಯನ್ನು ಕರೆದುಕೊಂಡು ಹೋಗಿ ಅಗತ್ಯ ಮಾಹಿತಿಗಳನ್ನು ಕಲೆ ಹಾಕಲಾಗಿದೆ.
ಹಲವು ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿದ್ಯಾರ್ಥಿನಿ ಮತ್ತು ಆರೋಪಿ ಜೊತೆಯಾಗಿ ಓಡಾಡಿದ್ದರೆ? ಎಂಬ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ರವಿಶಂಕರ್ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.
ರಾಯಚೂರು : ವಿದ್ಯಾರ್ಥಿನಿ ಸಾವಿನ ತನಿಖೆ ಆರಂಭಿಸಿದ ಸಿಐಡಿ
ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಏಪ್ರಿಲ್ 13ರಂದು ನಾಪತ್ತೆಯಾಗಿದ್ದಳು. ಏಪ್ರಿಲ್ 16ರಂದು ಆಕೆ ಶವವಾಗಿ ಪತ್ತೆಯಾಗಿದ್ದಳು. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದರು.
ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಿಐಡಿಗೆ
ಆದರೆ, ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಆದ್ದರಿಂದ, ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದೆ.