ಉಪ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಂಡಾಯದ ಬಿಸಿ!
ರಾಯಚೂರು, ನವೆಂಬರ್ 25 : 15 ಕ್ಷೇತ್ರಗಳ ಉಪ ಚುನಾವಣೆಯ ಬಂಡಾಯದ ಬಿಸಿ ತಣ್ಣಗಾಗಿಸಿದ್ದ ಬಿಜೆಪಿಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ. ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಬಂಡಾಯದ ಬಾವುಟ ಹಾರಿಸಿದ್ದಾನೆ. ಕ್ಷೇತ್ರದ ಉಪ ಚುನಾವಣೆ ಶೀಘ್ರದಲ್ಲೇ ನಡೆಯಲಿದೆ.
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿರುವ ಆರ್. ಬಸನಗೌಡ ತುರ್ವಿಹಾಳ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ.
ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?
ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಸೇರ್ಪಡೆಗೆ ಬಸನಗೌಡ ತುರ್ವಿಹಾಳ ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ, ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಅವರನ್ನು ಸಮಾಧಾನಪಡಿಸಲಾಗಿತ್ತು.
15 ಕ್ಷೇತ್ರದ ಉಪ ಚುನಾವಣೆ; ಯಡಿಯೂರಪ್ಪಗೆ ಅಮಿತ್ ಶಾ ಕರೆ!
ಆದರೆ, ಏಕಾಏಕಿ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ತುರ್ವಿಹಾಳ ರಾಜೀನಾಮೆ ನೀಡಿದ್ದಾರೆ. ಪ್ರತಾಪ್ ಗೌಡ ಪಾಟೀಲ್ ಈಗಾಗಲೇ ಬಿಜೆಪಿ ಸೇರಿದ್ದು, ಉಪ ಚುನಾವಣೆಯಲ್ಲಿ ಪಕ್ಷ ಅವರಿಗೆ ಟಿಕೆಟ್ ನೀಡಬೇಕಾದ ಒತ್ತಡದಲ್ಲಿ ಸಿಲುಕಿದೆ.
ಉಪ ಚುನಾವಣೆ; ಬಿಜೆಪಿಗೆ ಕಗ್ಗಂಟಾದ ಮೂರು ಕ್ಷೇತ್ರದ ಬಂಡಾಯ
ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ
2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ 60, 387 ಮತಗಳನ್ನು ಪಡೆದು ಮಸ್ಕಿಯಲ್ಲಿ ಗೆದ್ದಿದ್ದಾರೆ. ಅವರ ಎದುರಾಳಿಯಾಗಿದ್ದ ಬಿಜೆಪಿಯ ಬಸನಗೌಡ ತುರ್ವಿಹಾಳ 60, 174 ಮತ ಪಡೆದಿದ್ದಾರೆ. ಸೋಲಿನ ಅಂತರ ಕೇವಲ 213 ಮತಗಳು. ಬಸನಗೌಡ ತುರ್ವಿಹಾಳ ಪ್ರತಾಪ್ ಗೌಡ ಪಾಟೀಲ್ ನಕಲಿ ಮತಗಳಿಂದ ಗೆದ್ದಿದ್ದಾರೆ ಎಂದು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ, ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿಲ್ಲ.
ಅಧಿಕಾರ ಸ್ವೀಕಾರ, ರಾಜೀನಾಮೆ
ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನವನ್ನು ಬಸನಗೌಡ ತುರ್ವಿಹಾಳಗೆ ನೀಡಲಾಗಿತ್ತು. 15 ದಿನಗಳ ಹಿಂದೆ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಧಿಡೀರ್ ಬೆಳವಣಿಗೆಯಲ್ಲಿ ಅವರು ರಾಜೀನಾಮೆ ನೀಡಿದ್ದು, ಬಿಜೆಪಿ ನಾಯಕರ ತಲೆನೋವಿಗೆ ಕಾರಣವಾಗಿದೆ. ರಾಯಚೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಸನಗೌಡ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಪ್ರತಾಪ್ ಗೌಡ ಬಿಜೆಪಿ ಸೇರಿಯಾಗಿದೆ
ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಸೇರಲು ಬಸನಗೌಡ ತುರ್ವಿಹಾಳ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಸೇರಿಯಾಗಿದೆ. ಯಾವುದೇ ಕ್ಷಣದಲ್ಲಿ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಬಹುದು. ಆಗ ಬಿಜೆಪಿ ಟಿಕೆಟ್ ಯಾರಿಗೆ ಸಿಗಲಿದೆ? ಎಂಬ ಪ್ರಶ್ನೆ ಎದುರಾಗಿದೆ.
ಕಾಂಗ್ರೆಸ್ ಸೇರಲಿದ್ದಾರೆಯೇ?
ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಬಿಜೆಪಿ ನಾಯಕರು ಅವರ ಜೊತೆ ನಡೆಸಿದ ಸಂಧಾನ ಸಭೆ ಮುರಿದು ಬಿದ್ದಿದೆ. ಮುಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದ ಬಳಿಕ ಜಿಲ್ಲಾ ರಾಜಕೀಯ ಮತಷ್ಟು ಕಾವೇರಲಿದೆ.