ಮಸ್ಕಿ ಉಪ ಚುನಾವಣೆ: ದೀಪಾವಳಿ ಉಡುಗೊರೆ ಕೊಟ್ಟ ಬಿಜೆಪಿ ಸರ್ಕಾರ!
ಬೆಂಗಳೂರು, ನ. 15: ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಇದೀಗ ಮತ್ತೆರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಳಿದಿದ್ದಾರೆ. ಆದರೆ ಮಸ್ಕಿ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಳ್ಳುವಂತೆ ವಿಜಯೇಂದ್ರ ಅವರಲ್ಲಿ ಆ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅವರು ವಿನಂತಿಸಿದ್ದರು. ಆದರೆ ವಿಜಯೇಂದ್ರ ಅವರು ಬಸವಕಲ್ಯಾಣ ಉಪ ಚುನಾವಣೆ ಸಿದ್ಧತೆ ಆರಂಭಿಸಿದ್ದಾರೆ.
ಇದೀಗ ರಾಜ್ಯ ಬಿಜೆಪಿ ಸರ್ಕಾರ ಮಸ್ಕಿ ಚುನಾವಣೆಯತ್ತಲೂ ಗಮನ ಹರಿಸಿದೆ. ಹೀಗಾಗಿ ಮಸ್ಕಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದೆ. ಆ ಭಾಗದ ಜನರ ಬಹುದಿನ ಬೇಡಿಕೆಯನ್ನು ಈಡೇರಿಸಲು ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದೆ. ಈಗಾಗಲೇ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಅದಕ್ಕೆ 50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ. ಜೊತೆಗೆ ಅಲ್ಲಿ ಅಂಬಿಗರ ಚೌಡಯ್ಯ ಭವನ ನಿರ್ಮಾಣಕ್ಕೆ 2 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿ ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಉಡುಗೊರೆಯನ್ನು ರಾಜ್ಯ ಬಿಜೆಪಿ ಸರ್ಕಾರ ನೀಡಿದೆ. ಮಸ್ಕಿ ನಾಲಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಆಧುನೀಕರಣಕ್ಕೆ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡುವ ಮೂಲಕ ಚುನಾವಣೆ ತಯಾರಿ ಆರಂಭಿಸಿದೆ. ಮಸ್ಕಿ ನಾಲೆಯ ಕಾಲುವೆ ಆಧುನೀಕರಣಕ್ಕೆ 52.54 ಕೋಟಿ ರೂ. ಯೋಜನಾ ವರದಿಗೆ ಸರ್ಕಾರ ಅನುಮತಿ ನೀಡಿದ್ದು ಅಲ್ಲಿನ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ.
ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಇನ್ನು ಬಿಜೆಪಿ ನಾಯಕ ಬಸನಗೌಡ ತುರವಿಹಾಳ ಅವರನ್ನು ಸೆಳೆದು ಕಾಂಗ್ರೆಸ್ ಟಿಕೆಟ್ ಕೊಡಲು ಕೈ ನಾಯಕರು ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಆಡಳಿತಾರೂಢ ಬಿಜೆಪಿ ಸರ್ಕಾರ ನಾಲೆ ದುರಸ್ಥಿ ಮೂಲಕ ಉಪ ಚುನಾವಣೆ ಸಿದ್ಧತೆ ಆರಂಭಿಸಿದೆ.