ರಾಯಚೂರು : ಮರಳು ಮಾಫಿಯಾ ಅಟ್ಟಹಾಸ, ಗ್ರಾಮ ಲೆಕ್ಕಾಧಿಕಾರಿ ಹತ್ಯೆ
ರಾಯಚೂರು, ಡಿಸೆಂಬರ್ 23 : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿಯನ್ನು ಹತ್ಯೆ ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.
ಸಾಹೇಬ್ ಪಾಟೀಲ್ ಮೃತಪಟ್ಟ ಗ್ರಾಮ ಲೆಕ್ಕಾಧಿಕಾರಿ (village accountant). ಮಾನ್ವಿ ತಾಲೂಕಿನ ಚೀಕಪರ್ವಿ ಗ್ರಾಮದ ಸಾಹೇಬ್ ಪಾಟೀಲ್ ಚೀಕಪರ್ವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಆಗಿದ್ದೇನು? : ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗ ಮರಳು ಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಾಹೇಬ್ ಪಾಟೀಲ್ಗೆ ಸಿಕ್ಕಿತ್ತು. ಈ ಬಗ್ಗೆ ಪರಿಶೀಲನೆ ನಡೆಸಲು ಅವರು ಹೋಗಿದ್ದರು.

ಈ ವೇಳೆ ಲಾರಿ ಚಾಲಕ ಅವರಿಂದ ತಪ್ಪಿಸಿಕೊಳ್ಳಲು ಅವರಿಗೆ ಲಾರಿ ಡಿಕ್ಕಿ ಹೊಡೆಸಿದ್ದಾನೆ. ಕೆಳಗೆ ಬಿದ್ದ ಸಾಹೇಬ್ ಪಾಟೀಲ್ ಅವರ ಎರಡೂ ಕಾಲುಗಳ ಮೇಲೆ ಲಾರಿ ಹತ್ತಿ, ಕಾಲುಗಳು ಕಟ್ ಆಗಿವೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಲಾರಿಯನ್ನು ಸ್ಥಳಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಸಾಹೇಬ್ ಪಾಟೀಲ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು, ತಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.












Click it and Unblock the Notifications