ರಾಮನಗರ ಮ್ಯಾನ್ ಹೋಲ್ ದುರಂತ; ಪರಿಹಾರ ಘೋಷಣೆ
ರಾಮನಗರ, ಜೂನ್ 04; ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್ಹೋಲ್ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ದುರಂತದಲ್ಲಿ ಮೃತಪಟ್ಟವರಿಗೆ ಸರಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.
Recommended Video

ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ನಿರ್ಮಾಣ ಹಂತದ ಮ್ಯಾನ್ಹೋಲ್ನಲ್ಲಿ ಮೃತಪಟ್ಟಿದ್ದರು. ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದರು.
ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಎಚ್ಡಿಕೆ ಸಂತಾಪ; ಮ್ಯಾನ್ಹೋಲ್ ದುರಂತದಲ್ಲಿ ಮೂವರು ಮೃತಪಟ್ಟ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದರು. "ಯುಜಿಡಿ ಕೆಲಸ ಮಾಡುತ್ತಿದ್ದ ಹೊರ ಗುತ್ತಿಗೆ ಮೂವರು ಕಾರ್ಮಿಕರು ಮ್ಯಾನ್ ಹೋಲ್ನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿರುವುದು ಅತ್ಯಂತ ದುರ್ದೈವದ ಸಂಗತಿ"
"ಇದಕ್ಕಾಗಿ ತೀವ್ರ ಕಂಬನಿ ಮಿಡಿಯುತ್ತಾನೆ. ಇದೊಂದು ಮನಕಲಕುವ ಸರಣಿ ಸಾವು. ಬೇಜವಾಬ್ದಾರಿತನದಿಂದ ಗುತ್ತಿಗೆ ಕಾರ್ಮಿಕರ ಸಾವಿಗೆ ಕಾರಣನಾದ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ" ಎಂದು ಹೇಳಿದ್ದರು.












Click it and Unblock the Notifications