ಎಪಿಎಂಸಿ ತಿದ್ದುಪಡಿ ಕಾಯ್ದೆ: ರಾಮನಗರದಲ್ಲಿ ರೈತರ ಪ್ರತಿಭಟನೆ
ರಾಮನಗರ, ಮೇ 13: ಕೊರೊನಾ ವೈರಸ್ ಮಹಾಮಾರಿಗೆ ಇಡೀ ದೇಶವೇ ಸಂಕಷ್ಟ ಎದುರಿಸುತ್ತಿರುವ ಹೊತ್ತಿನಲ್ಲೇ ಕಾರ್ಪೋರೇಟ್ ವಲಯಕ್ಕೆ ಅನುಕೂಲ ಮಾಡಿಕೊಡಲು ದೇಶದ ಕೃಷಿಕರನ್ನು ಬಲಿಕೊಡಲು ಮುಂದಾಗಿರುವ ಕೇಂದ್ರದ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ರಾಮನಗರದಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಂಕೀರ್ಣದ ಮೆಟ್ಟಿಲು ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿದ ರೈತರು, ನಂತರ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ರವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಕೋವಿಡ್-19 ನಿಂದ ನರಳುತ್ತಿರುವ ಜನ ಸಾಮಾನ್ಯರು, ಕೂಲಿ ಕಾರ್ಮಿಕರು ಹಾಗೂ ರೈತರ ನೆರವಿಗೆ ಧಾವಿಸದೇ, ಉದ್ಯಮಿಗಳ ಹಿತಕ್ಕಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮುಂದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತಿದ್ದುಪಡಿ ಎಪಿಎಂಸಿ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದ್ದು, ಒಂದು ವೇಳೆ ರಾಜ್ಯಪಾಲರು ಅಂಕಿತ ಹಾಕಿದರೆ ರೈತರ ಮರಣ ಶಾಸನವಾಗುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು. ಸರ್ಕಾರ ತಕ್ಷಣವೇ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ಅಗ್ರಹಿಸಿದರು.











Click it and Unblock the Notifications