ಚನ್ನಪಟ್ಟಣದಲ್ಲಿ 500 ಜನರ ಚಿಕಿತ್ಸೆಗೆ ವ್ಯವಸ್ಥೆ: ಡಿಸಿಎಂ ಅಶ್ವಥ್ ನಾರಾಯಣ್
ರಾಮನಗರ, ಜುಲೈ 3: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್ ಕೇರ್ ಘಟಕ ಪ್ರಾರಂಭಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ತಿಳಿಸಿದರು.
Recommended Video
ಶುಕ್ರವಾರ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಡಾ.ಅಶ್ವಥ್ ನಾರಾಯಣ, ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.
ರಾಮನಗರ; ಡಿಸಿಎಂಗೆ ಭದ್ರತೆ ನೀಡಿದ್ದ ಇನ್ಸ್ ಪೆಕ್ಟರ್ ಗೆ ಕೊರೊನಾ ಸೋಂಕು
ಜಿಲ್ಲೆಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಬಂದರೂ ಅದನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿ ಉನ್ನತ ದರ್ಜೆಗೆ ಏರಿಸಲಾಗುವುದು. ಈ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ನ ಚಿಕಿತ್ಸೆಗಾಗಿ ಇಂತಿಷ್ಟೆ ಪ್ರಮಾಣದ ಹಾಸಿಗೆಗಳನ್ನು ಮೀಸಲಿಟ್ಟು ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ವತಿಯಿಂದಲೇ ರೋಗಿಗಳನ್ನು ದಾಖಲಿಸಲಾಗುವುದು. ಸ್ಥಳೀಯ ಆಡಳಿತದ ವತಿಯಿಂದ ಆಸ್ಪತ್ರೆಗೆ ದಾಖಲಿಸಲು ಕ್ರಮ ವಹಿಸಲಾಗುವುದರ ಜೊತೆಗೆ ಬಡವರು, ಶ್ರೀಮಂತರು ಎನ್ನದೇ ಎಲ್ಲರಿಗೂ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು.
ಹೋಂ ಕ್ವಾರಂಟೈನ್ ಉಲ್ಲಂಘನೆ; ರಾಮನಗರದಲ್ಲಿ 8 ಮಂದಿ ಮೇಲೆ FIR
ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವವರು ಅವರೇ ಆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಬೇಕಾಗುತ್ತದೆ. ಸರ್ಕಾರದ ಮೀಸಲು ಕೋಟಾದ ಹಾಸಿಗೆಗಳನ್ನು ಹೊರತುಪಡಿಸಿ, ಖಾಸಗಿ ಆಸ್ಪತ್ರೆಯ ಉಳಿದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ. ಎಲ್ಲರಿಗೂ ಚಿಕಿತ್ಸೆ ದೊರೆಯಬೇಕು ಅನ್ನುವ ಸದುದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಕೋವಿಡ್-19 ರ ರೋಗ ಲಕ್ಷಣವಿಲ್ಲದವರಿಗೆ ಆಸ್ಪತ್ರೆಯ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ ಅಂತಹವರು ಅವರ ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳಬಹುದು.
ಕೋವಿಡ್-19 ಇನ್ನೂ ನಿಯಂತ್ರಣದಲ್ಲಿದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಚಿಕಿತ್ಸೆ ಲಭ್ಯವಾಗಲಿದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಕೋವಿಡ್ ಅನ್ನು ನಿಯಂತ್ರಿಸಲು ಸರ್ಕಾರ ಅಗತ್ಯವಿರುವ ಕ್ರಮ ಕೈಗೊಂಡಿದೆ. ಹಾಗೆಯೇ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಅವರು ತಿಳಿಸಿದರು.
ಶಂಕೆ ಇರುವವರಿಗೆಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ವಿದೇಶದಿಂದ ಬಂದವರು, ಹೊರರಾಜ್ಯದಿಂದ ಬಂದವರಿಗೂ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದು ಸ್ಪಷ್ಟಪಡಿಸಿದರು.