ಕೊನೆಗೂ ರಾಮನಗರದೆಡೆ ಮುಖ ಮಾಡಲಿರುವ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್
ರಾಮನಗರ, ಅಕ್ಟೋಬರ್ 17: ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಡಿಸಿಎಂ ಅಶ್ವತ್ಥ್ ನಾರಾಯಣ್ ತಿಂಗಳ ನಂತರ ಪ್ರಥಮ ಬಾರಿಗೆ ಜಿಲ್ಲೆಗೆ ಭೇಟಿ ನೀಡಲಿದ್ದು, ಇದೇ ತಿಂಗಳ 21ರ ಸೋಮವಾರದಂದು ಅಧಿಕಾರಿಗಳ ಸಭೆ ಕರೆದಿದ್ದಾರೆ. ಅಂತು ಇಂತು ತಿಂಗಳ ನಂತರವಾದರೂ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ನೆನಪಾಗಿದೆಯಲ್ಲ ಎನ್ನುತ್ತಿದ್ದಾರೆ ಜಿಲ್ಲೆಯ ಜನರು.
ಈಗಾಗಲೇ ಅಶ್ವತ್ಥ್ ನಾರಾಯಣ್ ಕಚೇರಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಫೋನ್ ಮೂಲಕ ಸಭೆಯ ಬಗ್ಗೆ ಮಾಹಿತಿ ತಲುಪಿಸಿದ್ದಾರೆ. ಇಷ್ಟು ದಿನಗಳಾದರೂ ಉಸ್ತುವಾರಿ ಸಚಿವರು ಊರಿನ ಕಡೆ ಮುಖ ಮಾಡದ್ದನ್ನು ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದನ್ನು ಗಮನಿಸಿದ ಉಸ್ತುವಾರಿ ಸಚಿವರು ನನಗೆ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ. ಅದಕ್ಕಾಗಿ ಬೆಂಗಳೂರಿನ ತಮ್ಮ ಕಚೇರಿಗೆ ಅಧಿಕಾರಿಗಳನ್ನು ಕರೆಸಿಕೊಂಡು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಭೆ ನಡೆಸಿದ್ದೇನೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಜನರ ಆಕ್ರೋಶಕ್ಕೆ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದರು.
ಇದೀಗ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಆದರೆ ಇನ್ನೂ ಉಸ್ತುವಾರಿ ಸಚಿವರು ಜಿಲ್ಲಾ ಕೇಂದ್ರದಲ್ಲಿ ಕಚೇರಿ ತೆರೆದಿಲ್ಲ.