Bengaluru-Mysuru Expressway: ಕಣಮಿಣಕಿ ಟೋಲ್ ಬಳಿ KSRTC ಬಸ್ - ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಆದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಇಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ.
ರಾಮನಗರ, ಮಾರ್ಚ್, 19: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಆದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಇಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ. ಭಾನುವಾರ (ಮಾರ್ಚ್ 19) ಮತ್ತೆ ಕಣಮಿಣಕಿ ಟೋಲ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಗೆಯೇ ಬೈಕ್ನಲ್ಲಿದ್ದ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ ಎನ್ನಲಾಗಿದೆ. ಮತ್ತೊಂದೆಡೆ ಬೆಂಗಳೂರು-ಮೈಸೂರು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ ನಡೆಯುತ್ತಲೇ ಇವೆ. ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಹಲವು ಸಂಘಟನೆಗಳು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶವನ್ನು ಹೊರಹಾಕುತ್ತಿವೆ.

ಈ ನಡುವೆಯೇ ವಾಹನ ಸವಾರರು ಇಷ್ಟೊಂದು ಹಣವನ್ನು ಟೋಲ್ಗೆ ವ್ಯಹಿಸಿದರೆ ಹೇಗೆ ಅನ್ನುವ ಯೋಚನೆಯಲ್ಲಿ ಟೋಲ್ ತಪ್ಪಿಸುವ ದಾರಿಯನ್ನು ಹುಡುಕಿಕೊಂಡಿದ್ದಾರೆ. ಇಂದು ಮತ್ತೆ ಟೋಲ್ ತಪ್ಪಿಸುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ ಬೈಕ್ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇ ವಾಹನ ಸವಾರರಿಗೆ ಹೇಳಿ ಮಾಡಿಸಿದ ಹೆದ್ದಾರಿಯಾಗಿದೆ. ಹಾಗೆಯೇ ಉದ್ಘಾಟನೆಗೂ ಮುನ್ನವೇ ಈ ಹೆದ್ದಾರಿಯಲ್ಲಿ ಹಲವು ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗಿವೆ. ಅಪಘಾತದಲ್ಲಿ ಸಾವು, ನೋವುಗಳು ಸಂಭವಿಸಿರುವ ಪ್ರಕರಣಗಳು ವರದಿಯಾಗಿವೆ. ಹಾಗಾದರೆ ಯಾವ ಭಾರದಲ್ಲಿ ಎಷ್ಟು ಸಾವು, ಎಷ್ಟು ಮಂದಿ ಗಾಯಾಳುಗಳಾಗಿದ್ಧಾರೆ ಎನ್ನುವ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಜಾವಾಣಿ ವರದಿ ಮಾಡಿದ ಅಂಕಿಅಂಶಗಳ ಮೇರೆಗೆ ಈ ಸುದ್ದಿಯನ್ನು ಪ್ರಕಟಿಸಲಾಗಿದೆ.
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ವಾಹನ ಸಂಚಾರ ಆರಂಭವಾಗಿ ಆರು ತಿಂಗಳಿನೊಳಗೆ ಅಪಘಾತಗಳ ಸಂಖ್ಯೆ ಏರಿಕೆ ಆಗಿದೆ. ಒಟ್ಟು 84ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2022ರ ಸೆಪ್ಟೆಂಬರ್ನಿಂದ ನೂತನ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ 335ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಎಕ್ಸ್ಪ್ರೆಸ್ ವೇ ಕಾಮಗಾರಿ ಅಂತಿಮ ಹಂತದ ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಮಾಹಿತಿ ದೊರೆತಿದೆ.
ಕಂಬಳಗೋಡಿನಿಂದ ನಿಡಘಟ್ಟದವರೆಗಿನ ರಾಮನಗರ ಜಿಲ್ಲೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 110ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 41ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೆಯೇ 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 51 ಕಿಲೋ ಮೀಟರ್ನಷ್ಟು ಈ ಹೆದ್ದಾರಿ ಹಾದುಹೋಗುತ್ತದೆ. ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ಗಳಲ್ಲಿ ವಾಹನಗಳ ಸಂಚಾರ ತುಂಬಾ ವೇಗವಾಗಿರುತ್ತದೆ.
ಗಂಟೆಗೆ 120ರಿಂದ 140 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಸಂಚರಿಸುತ್ತವೆ. ಅಲ್ಲದೇ ಸರ್ವೀಸ್ ರಸ್ತೆಗಳಲ್ಲೂ ಸಹ ವಾಹನಗಳ ಸಂಚಾರ ಹೆಚ್ಚಾಗುತ್ತದೆ ಇದೆ. ಇನ್ನು ಸಕ್ಕರೆ ನಾಡು ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 225 ಅಪಘಾತ ಸಂಭವಿಸಿದ್ದು, 43 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಲಕ್ಷ್ಮೀಪುರ ಗೇಟ್ನಿಂದ ಮಣಿಪಾಲ್ ಆಸ್ಪತ್ರೆವರೆಗೆ 5 ಕಿಲೋ ಮೀಟರ್ ವ್ಯಾಪ್ತಿಯ ಹೆದ್ದಾರಿಯಲ್ಲಿ 6 ತಿಂಗಳಿಂದ 30 ಅಪಘಾತ ಪ್ರಕರಣಗಳು ವರದಿಯಾಗಿವೆ. ಹಾಗೆಯೇ 8 ಜನ ಮೃತಪಟ್ಟಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಸಂಭವಿಸಿದ 40 ಅಪಘಾತಗಳಲ್ಲಿ 9 ಮಂದಿ ಮೃತಪಟ್ಟಿದ್ದರೆ, ಜನವರಿ ತಿಂಗಳಿನಲ್ಲಿ ನಡೆದ 55 ಅಪಘಾತಗಳಲ್ಲಿ 10 ಜನರನ್ನು ಜವರಾಯ ಬಲಿ ತೆಗೆದುಕೊಂಡಿದ್ದಾನೆ. ಇನ್ನು ಎರಡು ತಿಂಗಳಿನಿಂದ ಈಚೆಗೆ 150ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಗಡಿ ನಿಡಘಟ್ಟದವರೆಗೂ ಕಾಮಗಾರಿ ಪೂರ್ಣವಾಗಿದೆ. ಆದರೆ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ಪ್ರಗತಿಯಲ್ಲಿದೆ. ವಾಹನ ಓಡಾಟಕ್ಕೆ ಮಾತ್ರ ಹೆದ್ದಾರಿ ಸಿದ್ಧವಾಗಿದೆ. ಆದರೆ ವಾಹನ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಇನ್ನು ಆಗಿಲ್ಲ. ಕಾಮಗಾರಿ ಪೂರ್ಣಗೊಂಡಿಲ್ಲದಿದ್ದರೂ ಕೂಡ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬೇಕು ಎನ್ನುವ ಅವರಸರೂ ಕೂಡ ಅಪಘಾತಕ್ಕೆ ಮುಖ್ಯ ಕಾರಣವಾಗಿದೆ ಅಂತಲೂ ಹೇಳಬಹುದಾಗಿದೆ.












Click it and Unblock the Notifications