Bengaluru-Mysuru expressway: ಕಾಮಗಾರಿ ಪೂರ್ಣವಾಗದೇ ಹೇಗೆ ಉದ್ಘಾಟನೆ ಮಾಡ್ತೀರಾ?: ಕನ್ನಡ ಪರ ಸಂಘಟನೆಗಳ ಪ್ರಶ್ನೆ
ರಾಮನಗರ, ಮಾರ್ಚ್, 10: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಕಾಮಗಾರಿ ಸಂಪೂರ್ಣವಾಗಿಲ್ಲ. ಸರ್ಕಾರ ತರಾತುರಿಯಲ್ಲಿ ಹೆದ್ದಾರಿ ಉದ್ಘಾಟನೆಗೆ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಲೇ ಇವೆ. ಹಾಗೆಯೇ ಸರ್ಕಾರದ ಈ ನಡೆಯನ್ನು ಖಂಡಿಸಿ ನೂರಾರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿ ಕುಳಿತಿವೆ. ರಸ್ತೆ ಉದ್ಘಾಟನೆ ದಿನದಂದೇ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದ್ದಾರೆ.
ಇದೇ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿಯವರು ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಮಾಡಲಿದ್ದಾರೆ. ಇದನ್ನು ವಿರೋಧಿಸಿ ನೂರಾರು ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಬೆಡದಿಯ ಹೆಜ್ಜಾಲ ಬಳಿಯ ಹೆದ್ದಾರಿ ಟೋಲ್ ಪ್ಲಾಜಾದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಮಗಾರಿ ಪೂರ್ಣವಾಗದೇ ಉದ್ಘಾಟನೆ ಮಾಡ್ತೀರಾ?
ಹಲವು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಹೆಜ್ಜಾಲ ಬಳಿ ಇರುವ ಟೋಲ್ ಸಂಗ್ರಹ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು. ಅಲ್ಲದೇ ಕೇಂದ್ರ ಸರ್ಕಾರ, ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರ ವಿರುದ್ಧವೂ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.
ಟೋಲ್ ಧ್ವಂಸ ಮಾಡುವುದಾಗಿ ಎಚ್ಚರಿಕೆ
ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿರುವ ಕಂಪನಿ ಕಾಮಾಗಾರಿಯನ್ನು ಸಂಪೂರ್ಣಗೊಳಿಸಿದ ನಂತರ ಉದ್ಘಾಟನೆ ಮಾಡಬೇಕು. ಒಂದು ವೇಳೆ ಉದ್ಧಟತನ ಪ್ರದರ್ಶಿಸಿ ಹೆದ್ದಾರಿ ಉದ್ಘಾಟನೆಗೆ ಮುಂದಾದರೆ, ಹೆದ್ದಾರಿ ಉದ್ಘಾಟನೆಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಒಂದು ಶೌಚಾಲಯವೂ ಇಲ್ಲ
ಈ ವೇಳೆ ಮಾತನಾಡಿದ ಕನ್ನಡ ಪರ ಹೋರಾಟಗಾರ ವಿ.ನರಸಿಂಹಮೂರ್ತಿ, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಾಗಾರಿ ಇನ್ನು ಸಂಪೂರ್ಣವಾಗಿಲ್ಲ. ಇನ್ನೂ ಹಲವೆಡೆ ಸರ್ವಿಸ್ ರಸ್ತೆ ನಿರ್ಮಾಣವಾಗಿಲ್ಲ. 120 ಕಿಲೋ ಮೀಟರ್ ಇರುವ ಹೆದ್ದಾರಿ ಪಕ್ಕದಲ್ಲಿ ಒಂದೇ ಒಂದು ಕಡೆಯೂ ಶೌಚಾಲಯ ನಿರ್ಮಾಣ ಮಾಡಿಲ್ಲ. ಹೆದ್ದಾರಿಯಲ್ಲಿ ಪ್ರಯಾಣ ಮಾಡುವವರಿಗೆ ಅಪಘಾತ ಅಥವಾ ಆರೋಗ್ಯದ ಸಮಸ್ಯೆ ಉಂಟಾದರೆ ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸರಿಯಾದ ಎಕ್ಸಿಟ್ ನಿರ್ಮಾಣ ಮಾಡಿಲ್ಲ ಎಂದು ಆರೋಪಿಸಿದರು.
ರೈತರು ಹೆದ್ದಾರಿಯಲ್ಲಿ ಪ್ರಯಾಣ ಮಾಡಲು ಸುಮಾರು 300 ರೂಪಾಯಿ ಪಾವತಿಸಬೇಕಾಗುತ್ತದೆ. ಸಾಮಾನ್ಯ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಮಧ್ಯಮ ವರ್ಗದ ಜನರು ಹೇಗೆ ಟೋಲ್ ಪಾವತಿಸಲು ಸಾಧ್ಯ ಎಂದು ಪ್ರಶ್ನಿಸಿದರು. ಒಂದು ವೇಳೆ ಹೆದ್ದಾರಿ ಪ್ರಧಿಕಾರ ಇದೇ ಮಾರ್ಚ್ 14ರಿಂದ ಟೋಲ್ ಸಂಗ್ರಹಕ್ಕೆ ಮುಂದಾದರೆ ಪರಿಣಾಮ ಸರಿ ಇರುವುದಿಲ್ಲ. ಹಾಗೆಯೇ ಹೆದ್ದಾರಿ ಕಾಮಾಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಕ್ಕೆ ಮುಂದಾದರೆ ಟೋಲ್ ಕೇಂದ್ರಗಳನ್ನು ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ
ನಂತರ ರಾಜ್ಯಾಧ್ಯಕ್ಷ ನೀಲೇಶ್ ಗೌಡ ಮಾತನಾಡಿ, ನೂತನ ದಶಪಥ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಬೇಕು. ನಂತರ ಎಕ್ಸ್ಪ್ರೆಸ್ ವೇ ಉದ್ಘಾಟನೆ ಮಾಡಲಿ. ಒಂದು ವೇಳೆ ಕನ್ನಡ ಪರ ಸಂಘಟನೆಗಳ ಎಚ್ಚರಿಕೆಯನ್ನು ನಿರ್ಲಕ್ಷ್ಯ ಮಾಡಿ ಹೆದ್ದಾರಿ ಉದ್ಘಾಟನೆಗೆ ಮುಂದಾದರೆ ಕಾರ್ಯಕ್ರಮದಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಎಚ್ವರಿಕೆ ನೀಡಿದರು.












Click it and Unblock the Notifications