ಉಪ ಚುನಾವಣೆ : ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ನಿರೀಕ್ಷೆ ಏನು?
ರಾಮನಗರ, ಅಕ್ಟೋಬರ್ 17 : ರಾಮನಗರ ಮತ್ತು ಮಂಡ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಪಕ್ಷ ನಿರೀಕ್ಷೆ ಹೊಂದಿಲ್ಲ. ಆದರೆ, ಜೆಡಿಎಸ್ ಪ್ರಭಾವ ಹೊಂದಿರುವ ಜಿಲ್ಲೆಗಳಲ್ಲಿ ಬಿಜೆಪಿ ನಿಧಾನವಾಗಿ ವೇದಿಕೆಯನ್ನು ಸಿದ್ಧಪಡಿಸಿಕೊಳ್ಳಲು ಉಪ ಚುನಾವಣೆ ಸಹಾಯಕವಾಗಲಿದೆ.
ನವೆಂಬರ್ 3ರಂದು ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿಯನ್ನು ಸೋಲಿಸಬೇಕು ಎಂದು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಪಕ್ಷ ನಿಧಾನವಾಗಿ ಒಕ್ಕಲಿಗರು ಪ್ರಭಾವಿಯಾಗಿರುವ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಿದೆ. ಒಕ್ಕಲಿಗರ ಮತಗಳನ್ನು ಸೆಳೆಯುತ್ತಿದೆ.
ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಬಿಜೆಪಿ ನಿಧಾನವಾಗಿ ತನ್ನ ಅಸ್ತಿತ್ವವನ್ನು ಕಂಡಕೊಳ್ಳುತ್ತಿದೆ. ರಾಜ್ಯ ಬಿಜೆಪಿ ನಾಯಕರು ಹೇಳುವ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ನೋಡಿದ ಒಕ್ಕಲಿಗ ಸಮುದಾಯದ ಯುವ ಮತದಾರರು ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ.....

ಜೆಡಿಎಸ್ ಭದ್ರಕೋಟೆ
ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ ಜಿಲ್ಲೆಗಳಿವೆ. ಈ ಭಾಗದ 59 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 2018ರ ಚುನಾವಣೆಯಲ್ಲಿ 10ರಲ್ಲಿ ಗೆಲುವು ಸಾಧಿಸಿದೆ. ಮತಗಳಿಕೆ ಪ್ರಮಾಣವೂ ಹೆಚ್ಚಾಗುತ್ತಿದೆ.

ಉಪ ಚುನಾವಣೆ ಸೋಲು
2017ರಲ್ಲಿ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದ ಉಪ ಚುನಾವಣೆ ನಡೆಯಿತು. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಕಾಂಗ್ರೆಸ್ಗೆ ಬೆಂಬಲ ನೀಡಿತು. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹೋರಾಟ ನಡೆದರೂ ಬಿಜೆಪಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಮತಗಳಿಗೆ ಹೆಚ್ಚುತ್ತಿದೆ
2008ರ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿತ್ತು. ಶೇ 21.6ರಷ್ಟು ಮತಗಳಿಸಿತ್ತು. ಆದರೆ, 2013ರ ಚುನಾವಣೆಯಲ್ಲಿ ಅದು ಶೇ 8.18ಕ್ಕೆ ಕುಸಿಯಿತು. 2018ರ ಚುನಾವಣೆಯಲ್ಲಿ ಮತ್ತೆ ಪಕ್ಷ 18.4ರಷ್ಟು ಮತವನ್ನು ಪಡೆದಿದೆ. ಮಂಡ್ಯ ಜಿಲ್ಲೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗ ಬಿಜೆಪಿ ಶಾಸಕರು ಇದ್ದಾರೆ.

ಒಕ್ಕಲಿಗ ಮತಗಳು
ಹಳೆ ಮೈಸೂರು ಭಾಗದಲ್ಲಿ ಗೆಲುವು ಸಾಧಿಸಬೇಕು ಎಂದರೆ ಒಕ್ಕಲಿಗರ ಮತಗಳನ್ನು ಸೆಳೆಯಬೇಕು. ಅದರಲ್ಲೂ ಯುವ ಒಕ್ಕಲಿಗ ಮತದಾರರನ್ನು ಪಕ್ಷದತ್ತ ಸೆಳೆಯಬೇಕು. ಅದಕ್ಕಾಗಿ ಪಕ್ಷ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸಿದೆ. ತೇಜಸ್ವಿನಿ ಗೌಡ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಮಾಡಲಾಗಿದೆ. ಪ್ರೀತಮ್ ಜೆ.ಗೌಡ ಅವರು ಹಾಸನದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಅಶೋಕ್, ಡಿವಿಎಸ್ ಉಸ್ತುವಾರಿ
ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ. ಆರ್.ಅಶೋಕ ಮಂಡ್ಯ ಲೋಕಸಭೆ ಉಪ ಚುನಾವಣೆ ಉಸ್ತುವಾರಿಯಾಗಿದ್ದಾರೆ. ರಾಮನಗರ ಉಸ್ತುವಾರಿಯನ್ನು ಡಿ.ವಿ.ಸದಾನಂದ ಗೌಡ ಅವರಿಗೆ ನೀಡಲಾಗಿದೆ. ಯಡಿಯೂರಪ್ಪ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.












Click it and Unblock the Notifications