ರಾಮನಗರ ಬಂದ್ಗೆ ನೀರಸ ಪ್ರತಿಕ್ರಿಯೆ: ಪ್ರತಿಭಟನೆಗೆ ಸೀಮಿತವಾದ ಕಾವೇರಿ ಹೋರಾಟ
ರಾಮನಗರ, ಸೆಪ್ಟೆಂಬರ್ 26: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ರಾಮನಗರ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ರಾಮನಗರ ಬಂದ್ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತು ಪಡಿಸಿ ಉಳಿದೆಲ್ಲ ಸೇವೆ ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಸಂಪೂರ್ಣ ಬಂದ್ಗೆ ಸೂಚಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಎಲ್ಲಾ ವಹಿವಾಟುಗಳು ಎಂದಿನಂತೆ ನಡೆಯುತ್ತಿದೆ.

ರಾಮನಗರ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆದಿದ್ದು, ಎಪಿಎಂಸಿ ಹಾಗೂ ಹೂವಿನ ಮಾರುಕಟ್ಟೆಯಲ್ಲೂ ಎಂದಿನಂತೆ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಇನ್ನು ವಾಹನ ಸಂಚಾರ ಕೂಡ ಸಾಮಾನ್ಯವಾಗಿದೆ. ಸಾರ್ವಜನಿಕರು ತಮ್ಮ ತಮ್ಮ ಕೆಲಸಗಳಿಗೆ ತೆರಳಿದ್ದಾರೆ.
ಇನ್ನು ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದಿನ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಇತ್ತೀಚೆಗಷ್ಟೇ ಮೆಡಿಕಲ್ ಕಾಲೇಜು ಸ್ಥಳಾಂತರ ವಿಷಯಕ್ಕೆ ಸಂಬಂಧಿಸಿದಂತೆ ರಾಮನಗರ ಬಂದ್ ಮಾಡಲಾಗಿತ್ತು. ತಿಂಗಳಲ್ಲಿ ಎರಡು ದಿನ ಬಂದ್ಗೆ ಕರೆ ನೀಡಿದರೆ ವರ್ತಕರಿಗೆ ನಷ್ಟವಾಗಲಿದ್ದು, ಹೀಗಾಗಿ ಇಂದಿನ ರಾಮನಗರ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿ, ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಲು ರಾಮನಗರ ವರ್ತಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನೆ: ಸ್ಟಾಲಿನ್ ವಿರುದ್ಧ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ತಮಿಳುನಾಡು ಸಿಎಂ ಸ್ಟಾಲಿನ್ಗೆ ಶ್ರದ್ಧಾಂಜಲಿ ಕೋರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು ಘೋಷಣೆ ಕೂಗಿ ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಬಾಯಿ ಬಡಿದುಕೊಂಡು ಸ್ಟಾಲಿನ್ ಸತ್ತೋದ ಎಂದು ಆಕ್ರಂದನ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ಧ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.












Click it and Unblock the Notifications